ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಗರಿಕರಿಗೆ ಸುಲಭವಾಗಿ ಮತ್ತು ಪಾರದರ್ಶಕವಾಗಿ ಇ-ಖಾತಾ ತಲುಪಿಸುವ ನಿಟ್ಟಿನಲ್ಲಿ ಇಂದಿನಿಂದ ರಾಜ್ಯಾದ್ಯಂತ ಬಹುನಿರೀಕ್ಷಿತ 'ನನ್ನ ಇ-ಖಾತಾ ನನ್ನ ಹಕ್ಕು' ಅಭಿಯಾನ ಆರಂಭಗೊಂಡಿದೆ.
ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು ಬಳಿಯ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಕಲ್ಕೆರೆ ಅಗರ ಮುಖ್ಯ ರಸ್ತೆಯಲ್ಲಿರುವ ಇ-ಖಾತಾ ನೋಂದಣಿ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕರೊಂದಿಗೆ ಸಮಾಲೋಚನೆ, ಸಿಬ್ಬಂದಿಗೆ ಸೂಚನೆ ಕೇಂದ್ರದಲ್ಲಿ ಇ-ಖಾತಾ ಪಡೆದುಕೊಳ್ಳಲು ಆಗಮಿಸಿದ್ದ ಸಾರ್ವಜನಿಕರೊಂದಿಗೆ ನೇರವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ಇ-ಖಾತಾ ವಿತರಣೆಯಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮವಾಗಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
"ನಾಗರಿಕರ ಆಸ್ತಿ ಹಕ್ಕುಗಳನ್ನು ರಕ್ಷಿಸುವುದು ಮತ್ತು ಖಾತಾ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸುವುದೇ ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಅವರ ಇ-ಖಾತಾ ತಲುಪಿಸಲು ಸರ್ಕಾರ ಬದ್ಧವಾಗಿದೆ."
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ.
ಏನಿದು 'ನನ್ನ ಇ-ಖಾತಾ ನನ್ನ ಹಕ್ಕು' ಅಭಿಯಾನ?:
ಆಸ್ತಿ ಮಾಲೀಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಈ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಆಸ್ತಿ ದಾಖಲೆಗಳ ಡಿಜಿಟಲೀಕರಣ ಹಾಗೂ ತಂತ್ರಜ್ಞಾನದ ಬಳಕೆಯ ಮೂಲಕ ಅತ್ಯಂತ ಸರಳವಾಗಿ ಸಾರ್ವಜನಿಕರು ತಮ್ಮ ಇ-ಖಾತಾವನ್ನು ಪಡೆದುಕೊಳ್ಳಲು ಈ ಕೇಂದ್ರಗಳು ನೆರವಾಗಲಿವೆ.
ಬೆಂಗಳೂರಿನಾದ್ಯಂತ ವಿವಿಧ ಕೇಂದ್ರಗಳಲ್ಲಿ ಇಂದಿನಿಂದ ಈ ಪ್ರಕ್ರಿಯೆ ಚುರುಕುಗೊಂಡಿದ್ದು, ಆಸ್ತಿ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.


