ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ 'ಕಾಕ್ರೋಚ್ ಜನತಾ ಪಾರ್ಟಿ' ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪ ತೀವ್ರಗೊಂಡಿದೆ. ಈ ಕುರಿತು ಪಾರದರ್ಶಕ ತನಿಖೆ ನಡೆಸಲು ಸ್ವತಂತ್ರ ವಿಶೇಷ ತನಿಖಾ ತಂಡ ಅಥವಾ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಕುರಿತ ಅರ್ಜಿಯ ವಿಚಾರಣೆ ನಡೆಸಿತು.
"ಕಾನೂನು ಮೀರಿದವರಿಗೆ ಶಿಕ್ಷೆ ಖಚಿತ":ಸುಪ್ರೀಂ ಕಠಿಣ ಸಂದೇಶ
ವಿಚಾರಣೆ ಆರಂಭದಲ್ಲೇ ಗಂಭೀರವಾಗಿ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, "ಈ ಆರೋಪಗಳ ಕುರಿತು ಸ್ವತಂತ್ರ, ಪಾರದರ್ಶಕ ಹಾಗೂ ಸಮಗ್ರ ತನಿಖೆಗೆ ಏಕೆ ಆದೇಶಿಸಬಾರದು? ಯಾರು ಕಾನೂನನ್ನು ಕೈಗೆತ್ತಿಕೊಂಡಿದ್ದಾರೋ ಮತ್ತು ಯಾರು ಮಿತಿಮೀರಿದ ಕ್ರಮ ಕೈಗೊಂಡಿದ್ದಾರೋ ಅವರ ವಿರುದ್ಧ ಕಾನೂನು ಕ್ರಮ ಜರುಗಲೇಬೇಕು" ಎಂದು ಖಡಕ್ ಎಚ್ಚರಿಕೆ ನೀಡಿದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನ ಬದ್ಧ ಹಕ್ಕು. ಯಾವುದೇ ಕಾರಣಕ್ಕೂ ಪೊಲೀಸ್ ದೌರ್ಜನ್ಯ ಅಥವಾ ಲಾಠಿಚಾರ್ಜ್ ಅನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಪೀಠ ಪುನರುಚ್ಚರಿಸಿದೆ.
'ದಾಳಿ ನಡೆಸಿದ್ದು ವಿದ್ಯಾರ್ಥಿಗಳೋ, ಸಮಾಜಘಾತುಕರೋ?':
ಇದೇ ವೇಳೆ, ಪ್ರತಿಭಟನೆ ವೇಳೆ ಸುಮಾರು 250 ಪೊಲೀಸ್ ಸಿಬ್ಬಂದಿ ಮೇಲೆ ನಡೆದ ದಾಳಿಯ ಕುರಿತೂ ತನಿಖೆ ನಡೆಯಬೇಕಿದೆ ಎಂದು ಕೋರ್ಟ್ ಹೇಳಿದೆ. ಈ ಕೃತ್ಯ ಎಸಗಿದ್ದು ನಿಜವಾಗಿಯೂ ವಿದ್ಯಾರ್ಥಿಗಳೇ ಅಥವಾ ಅವರ ಮಧ್ಯೆ ನುಸುಳಿದ ಸಮಾಜಘಾತುಕ ಶಕ್ತಿಗಳೇ ಎಂಬುದನ್ನು ಪತ್ತೆಹಚ್ಚುವುದು ಅತ್ಯಗತ್ಯ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ:
"ವಿದ್ಯಾರ್ಥಿಗಳು ಪೊಲೀಸರ ಮೇಲೆ ಹಿಂಸಾಚಾರ ನಡೆಸಿರುವ ಸಾಧ್ಯತೆ ಕಮ್ಮಿ. ಕೊಲೆ, ಅತ್ಯಾಚಾರ ಮತ್ತು ಎನ್ಡಿಪಿಎಸ್ ನಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಮಾಜಘಾತುಕ ಅಂಶಗಳೇ ಪ್ರತಿಭಟನಾಕಾರರೊಳಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ನಡೆಸಿವೆ."
ಘಟನೆಯ ಹಿನ್ನೆಲೆ: ಜುಲೈ 20ರಂದು ದೆಹಲಿಯಲ್ಲಿ ಸಿಜೆಪಿ ನೇತೃತ್ವದಲ್ಲಿ 'ಸಂಸದ್ ಚಲೋ' ಪ್ರತಿಭಟನೆ ಆಯೋಜಿಸಲಾಗಿತ್ತು. ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಸಂಸತ್ ಭವನದತ್ತ ನುಗ್ಗಲು ಯತ್ನಿಸಿದಾಗ ಭದ್ರತಾ ಪಡೆಗಳೊಂದಿಗೆ ತೀವ್ರ ಘರ್ಷಣೆ ಸಂಭವಿಸಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿದ್ದರು.



