ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ, ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಜೂನ್ 30 ರಿಂದ ಜುಲೈ 29 ರವರೆಗೆ ಒಂದು ತಿಂಗಳ ಕಾಲ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ಜವಾಬ್ದಾರಿಯಿಂದ ಕೈಜೋಡಿಸಬೇಕೆಂದು ಅವರು ಕೋರಿದ್ದಾರೆ.
ನಕಲಿ ಮತದಾರರ ತೆರವಿಗೆ ಸಹಕರಿಸಿ:
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಿಮ್ಮ ಮನೆ ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು. ಕ್ಷೇತ್ರದಲ್ಲಿರುವ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಮತ್ತು ಅರ್ಹ ಹಾಗೂ ನೈಜ ಮತದಾರರನ್ನೊಳಗೊಂಡ ಪಾರದರ್ಶಕ ಪಟ್ಟಿಯನ್ನು ರಚಿಸಲು ಇದು ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ:
ಮನೆಗೆ ಬರುವ ಅಧಿಕಾರಿಗಳಿಗೆ ನಿಮ್ಮ ನಿಖರವಾದ ಹಾಗೂ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ನಿಮ್ಮ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಿ. ಪ್ರತಿಯೊಬ್ಬ ನಾಗರಿಕನೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ನಾಡಿನ ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ.



