ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
"ರಾಷ್ಟ್ರೀಯತೆಯ ಭದ್ರ ಬುನಾದಿಯ ಮೇಲೆ ನಿಂತಿರುವ ನಮ್ಮ ಪಕ್ಷಕ್ಕೆ ಸಂಘಟನೆಯೇ ಶಕ್ತಿ ಮತ್ತು ಸಿದ್ಧಾಂತವೇ ಉಸಿರು" ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಕುರಿತು ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ‘ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026’ರ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನಸೇವೆ ಮತ್ತು ಸಂಘಟನೆಗೆ ಒತ್ತು:
ಕಾರ್ಯಕ್ರಮದ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ 'ಅಂತ್ಯೋದಯ' ಕಲ್ಪನೆಯನ್ನು ಸಾಕಾರಗೊಳಿಸುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದು ಕರೆ ನೀಡಿದರು.
"ಜನರ ಆಶೋತ್ತರಗಳಿಗೆ ಧ್ವನಿಯಾಗಿ, ಜನಸೇವೆಗೆ ಕಟಿಬದ್ಧರಾಗಿ, ನಾವೆಲ್ಲರೂ ಒಂದಾಗಿ ಮುನ್ನಡೆಯುವ ಮೂಲಕ ಸಂಘಟನೆ ಕಟ್ಟುವುದೇ ನಮ್ಮ ಕಾರ್ಯಶೈಲಿಯಾಗಿದೆ. ಈ ಪ್ರಶಿಕ್ಷಣ ಶಿಬಿರವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ದೃಢತೆ ಹಾಗೂ ಚೈತನ್ಯವನ್ನು ತುಂಬಿದೆ" ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗದಲ್ಲಿ ನಡೆದ ಈ ಮಹತ್ವದ ಪ್ರಶಿಕ್ಷಣ ಶಿಬಿರದಲ್ಲಿ ಜಿಲ್ಲೆಯ ಹಾಗೂ ರಾಜ್ಯದ ಪ್ರಮುಖ ನಾಯಕರು ಭಾಗವಹಿಸಿದ್ದರು.
ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರು ಹಾಗೂ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಶಾಸಕ ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಪ್ರಶಿಕ್ಷಣ ಅಭಿಯಾನದ ರಾಜ್ಯ ಸಹ ಸಂಚಾಲಕ ವಿಕಾಸ್ ಪುತ್ತೂರು ಇವರೊಂದಿಗೆ ಪಕ್ಷದ ಪ್ರಮುಖ ಮುಖಂಡರಾದ ಎಸ್. ಲಿಂಗಮೂರ್ತಿ, ವಿಭಾಗ ಪ್ರಭಾರಿ ಟಿ.ಡಿ. ಮೇಘರಾಜ್ ಸೇರಿದಂತೆ ಜಿಲ್ಲೆಯ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಉತ್ಸಾಹಿ ಕಾರ್ಯಕರ್ತರು ಉಪಸ್ಥಿತರಿದ್ದು, ಶಿಬಿರವನ್ನು ಯಶಸ್ವಿಗೊಳಿಸಿದರು.



