ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಪೇದೆಯ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ ಅವ್ಯವಸ್ಥೆಗೆ ಅವಕಾಶ ನೀಡದೆ ಶಾಂತಿಯುತವಾಗಿ ಪರೀಕ್ಷೆ ನಡೆಯಿತು.
ದೊಡ್ಡಬಳ್ಳಾಪುರ ತಾಲೂಕಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ ಆ 2, 2026 ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.ಗಂಟೆಯವರೆಗೆ ಲಿಖಿತ ಪರೀಕ್ಷೆಯಲ್ಲಿ ಒಟ್ಟು 100 ಅಂಕಗಳಿಗೆ, 90 ನಿಮಿಷಗಳ ಕಾಲಾವಧಿ ನೀಡಲಾಗಿದ್ದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲಾಯಿತು. ಪರೀಕ್ಷೆಯ ಪಾರದರ್ಶಕತೆ ಹಾಗೂ ಭದ್ರತೆಯನ್ನು ಖಚಿತಪಡಿಸಲು ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳ ಮೂಲಕ ಲೈವ್ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿತ್ತು.
ಅಕ್ರಮ ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಝರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಜೊತೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಇದೇ ವೇಳೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರ ಸಂಖ್ಯೆ 103ರಲ್ಲಿ ಅಭ್ಯರ್ಥಿಗಳ ಫೇಸ್ ಡಿಟೆಕ್ಷನ್ ಪ್ರಕ್ರಿಯೆಗೆ ಬಳಸುತ್ತಿದ್ದ ಸರ್ವರ್ ತಾತ್ಕಾಲಿಕವಾಗಿ ಸ್ಥಗಿತಗೊಂಡ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಆರಂಭದಲ್ಲಿ ಅಭ್ಯರ್ಥಿಗಳಲ್ಲಿ ಆತಂಕ ಕಂಡುಬಂದರೂ, ಪರೀಕ್ಷಾ ಸಿಬ್ಬಂದಿ ತಕ್ಷಣವೇ ಮ್ಯಾನ್ಯುಯಲ್ ಪರಿಶೀಲನೆ ನಡೆಸಿ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದರು. ಇದರಿಂದ ಯಾವುದೇ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ತೊಂದರೆಯಾಗದೆ, ಎಲ್ಲರೂ ನಿರಾಳವಾಗಿ ಪರೀಕ್ಷೆಯಲ್ಲಿ ಭಾಗವಹಿಸಿದರು.
ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3,462 ಅಭ್ಯರ್ಥಿಗಳು ನೋಂದಾಯಿಸಿ ಕೊಂಡಿದ್ದರು. ಅವರಲ್ಲಿ ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3,462 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 3,228 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 234 ಅಭ್ಯರ್ಥಿಗಳು ಗೈರಾಗಿದ್ದಾರೆ. ಒಟ್ಟಾರೆ ಪರೀಕ್ಷೆ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯಿತು.



