ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಪ್ರತಿಯೊಂದು ನೇಮಕಾತಿ ಪರೀಕ್ಷೆಯೂ ಗೊಂದಲದ ಗೂಡಾಗಿ, ಸಂಪೂರ್ಣ ವೈಫಲ್ಯ ಕಾಣುತ್ತಿದೆ" ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಾದ ಒಎಂಆರ್ ಶೀಟ್ ಗೊಂದಲ ಹಾಗೂ ಅಸಮರ್ಥ ನಿರ್ವಹಣೆಯನ್ನು ಖಂಡಿಸಿರುವ ಅವರು, "ಈ ಪರೀಕ್ಷಾ ವೈಫಲ್ಯದ ಹೊಣೆ ಹೊತ್ತು ಗೃಹ ಸಚಿವರ ರಾಜೀನಾಮೆ ಪಡೆಯುತ್ತೀರಾ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ?" ಎಂದು ಪ್ರಶ್ನಿಸಿದ್ದಾರೆ.
ಯುವಕರ ಭವಿಷ್ಯದ ಜೊತೆ ಸರ್ಕಾರದ ಆಟ:
ಗ್ರಾಮೀಣ ಭಾಗದ ಸಾವಿರಾರು ಯುವಕ-ಯುವತಿಯರು ವರ್ಷಗಟ್ಟಲೆ ಕಠಿಣ ಅಭ್ಯಾಸ ನಡೆಸಿದ್ದು, ಉದ್ಯೋಗದ ಕನಸು ಕಂಡಿದ್ದರು. ಆದರೆ ಸರ್ಕಾರದ ಅಸಮರ್ಥ ವ್ಯವಸ್ಥೆಯಿಂದಾಗಿ ಅವರ ಭವಿಷ್ಯಕ್ಕೆ ಕಂಟಕ ಎದುರಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆಯೇ ಈ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ದೂರಿದರು.
ಗೃಹ ಸಚಿವರ ವಿರುದ್ಧ ತೀವ್ರ ವಾಗ್ದಾಳಿ:
"ಗೃಹ ಸಚಿವರು ತಮ್ಮ ಇಲಾಖೆಯ ಕಾರ್ಯನಿರ್ವಹಣೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಇತರರಿಗೆ ಸರ್ಟಿಫಿಕೇಟ್ ಕೊಡುತ್ತಾ ಕಾಲ ಕಳೆಯುತ್ತಿದ್ದಾರೆ. ಒಂದೇ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಈ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ" ಎಂದು ಸಿ.ಟಿ. ರವಿ ವ್ಯಂಗ್ಯವಾಡಿದರು.
ಪ್ರಮುಖ ಬೇಡಿಕೆಗಳು:
ಮರು ಪರೀಕ್ಷೆ: ಗೊಂದಲಕ್ಕೊಳಗಾದ ಕೇಂದ್ರಗಳ ಅಭ್ಯರ್ಥಿಗಳಿಗೆ ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಮರು ಪರೀಕ್ಷೆ ನಡೆಸಬೇಕು.
ಉನ್ನತ ಮಟ್ಟದ ತನಿಖೆ: ಈ ಪರೀಕ್ಷಾ ಲೋಪಕ್ಕೆ ಕಾರಣರಾದವರ ವಿರುದ್ಧ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು.
ಗೃಹ ಸಚಿವರ ರಾಜೀನಾಮೆ: ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡುವ ಮುಖ್ಯಮಂತ್ರಿಗಳು, ರಾಜ್ಯದ ಯುವಜನತೆಗೆ ನ್ಯಾಯ ಒದಗಿಸಲು ಗೃಹ ಸಚಿವರ ರಾಜೀನಾಮೆ ಪಡೆಯಬೇಕು.
ಕಾಂಗ್ರೆಸ್ ಸರ್ಕಾರದ ಈ ನಿರ್ಲಕ್ಷ್ಯ ಧೋರಣೆಯಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಬೀದಿಗೆ ಬೀಳುವಂತಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.



