ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡೆಂಗ್ಯೂ, ಚಿಕೂನ್ಗುನ್ಯಾ ಹಾಗೂ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಮಳೆಗಾಲದ ಅವಧಿಯಲ್ಲಿ ಹೆಚ್ಚಾಗಿ ಹರಡುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದು ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಮಹೇಶ್ ತಿಳಿಸಿದರು.
ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಕೂನಬೇವು ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ‘ಡೆಂಗ್ಯೂ ವಿರೋಧಿ ಮಾಸಾಚರಣೆ' ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟಿ ಸೊಳ್ಳೆಗಳಿಂದ ಡೆಂಗ್ಯೂ ಅಥವಾ ಮೂಳೆ ಮುರಿತ ಜ್ವರ ಹರಡುತ್ತದೆ. ರೋಗಬಾಧಿತರು ತೀವ್ರ ಜ್ವರದಿಂದ ಬಳಲುತ್ತಾರೆ. ಇದನ್ನು ತಡೆಗಟ್ಟಲು ನಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಹಾಗೂ ನೀರು ನಿಲ್ಲುವ ಮೂಲಗಳನ್ನು ಮುಚ್ಚುವುದು ಅತ್ಯಗತ್ಯ. ಮಳೆಗಾಲದ ಸಂದರ್ಭದಲ್ಲಿ ಇಂತಹ ರೋಗಗಳು ಅತಿ ವೇಗವಾಗಿ ಹರಡುತ್ತವೆ ಎಂದು ತಿಳಿಸಿದ ಅವರು, ಆಶಾ ಕಾರ್ಯಕರ್ತೆಯರು ಗ್ರಾಮದಲ್ಲಿ ಲಾರ್ವಾ ಸಮೀಕ್ಷೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕ ಎಸ್.ಹನುಮಂತಪ್ಪ ಮಾತನಾಡಿ, ರೋಗಗಳು ಬರುವ ಮೊದಲೇ ಜಾಗೃತಿ ವಹಿಸುವುದು ಜಾಣತನ. ಎಲ್ಲರೂ ತಮ್ಮ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಗ್ರಾಮದ ಜನರ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶುಶ್ರೂಷಕಿ ಭಾರತಿ, ಆಶಾ ಕಾರ್ಯಕರ್ತೆಯರು ಹಾಗೂ ಶಾಲೆಯ ಸಹ ಶಿಕ್ಷಕರು ಉಪಸ್ಥಿತರಿದ್ದರು.



