ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಬೆಳೆ ವಿಮೆ ಪಾವತಿಸಿರುವ ರೈತರಿಗೆ ಇನ್ನೆರಡು ದಿನಗಳಲ್ಲಿ ವಿಮೆ ಹಣ ಬಿಡುಗಡೆ ಮಾಡದಿದ್ದರೆ ಮೇ.೭ ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಎಚ್ಚರಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆ.ಪಿ.ಭೂತಯ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಮಾ.೩ ರಂದು ಬೆಳೆವಿಮೆ ಪಾವತಿಸುವಂತೆ ಚಳ್ಳಕೆರೆ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಧರಣಿ ಕುಳಿತಾಗ ಜಂಟಿ ಕೃಷಿ ನಿರ್ದೇಶಕರು ಹಾಗೂ ತಹಶೀಲ್ದಾರ್ ಇವರುಗಳು ಸ್ಥಳಕ್ಕೆ ಆಗಮಿಸಿ ಬೆಳೆವಿಮೆ ಪಾವತಿಸುತ್ತೇವೆ. ಧರಣಿಯನ್ನು ಹಿಂದಕ್ಕೆ ಪಡೆಯುವಂತೆ ಮನವೊಲಿಸಿದಾಗ ಉಪವಾಸ ಸತ್ಯಾಗ್ರಹ ಕೈಬಿಟ್ಟೆವು. ಆದರೆ ಇದುವರೆವಿಗೂ ಬೆಳೆವಿಮೆ ರೈತರ ಬ್ಯಾಂಕ್ ಖಾತೆಗಳಿಗೆ ಜಮ ಆಗಿಲ್ಲ ಎಂದು ದೂರಿದರು.
ಚಳ್ಳಕೆರೆ ತಾಲ್ಲೂಕಿನ ಹಿರೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೮೦ ರೈತರಿಗೆ ಓರಿಯಂಟಲ್ ವಿಮಾ ಕಂಪನಿ ಬೆಳೆ ವಿಮೆ ಪಾವತಿಸಿದ್ದು, ಜಿಲ್ಲೆಯ ಎಲ್ಲಾ ರೈತರಿಗೆ ಏಕೆ ಪಾವತಿಸಿಲ್ಲ. ಇಂತಹ ತಾರತಮ್ಯವೆಸಗುತ್ತಿರುವ ಈ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ರೈತ ಮುಖಂಡ ಕೆ.ಸಿ.ಹೊರಕೇರಪ್ಪ ಮಾತನಾಡುತ್ತ ಪ್ರಧಾನ ಮಂತ್ರಿಗಳ ಫಸಲ್ ಭೀಮ ಯೋಜನೆಯಡಿ ಅನುಕೂಲವಾಗುತ್ತದೆಂದು ನಂಬಿ ಬೆಳೆ ವಿಮೆ ಕಟ್ಟಿರುವ ರೈತರಿಗೆ ವಿಮೆ ಕಂಪನಿಗಳು ಪರಿಹಾರ ಕೊಡದೆ ಮೋಸ ಮಾಡುತ್ತಿವೆ. ಸರ್ಕಾರವೇ ನೇರವಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕು. ಜಿಲ್ಲಾಡಳಿತ
ಕೃಷಿ ಇಲಾಖೆ, ಬೆಳೆ ವಿಮೆ ಕಂಪನಿಗಳು ನಿರಂತರವಾಗಿ ರೈತರಿಗೆ ಮೋಸ ಮಾಡುತ್ತಿವೆ. ಜಿಲ್ಲೆಯಾದ್ಯಂತ ಪ್ರತಿ ತಾಲ್ಲೂಕಿನಲ್ಲಿಯೂ ಬೆಳೆ ವಿಮೆ ಹಣ ನೀಡುವಂತೆ ನವೆಂಬರ್ನಿಂದಲೂ ಹೋರಾಟ ಮಾಡುತ್ತಿದ್ದೇವೆ. ಮೂರ್ನಾಲ್ಕು ದಿನಗಳಲ್ಲಿ ಬೆಳೆ ವಿಮೆ ಪಾವತಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಿ ಹೆದ್ದಾರಿ ಬಂದ್ ಮಾಡುವುದಾಗಿ ಗಡುವು ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸ್ತಿಹಳ್ಳಿ ಜಿ.ಸುರೇಶ್ಬಾಬು, ತಾಲ್ಲೂಕು ಅಧ್ಯಕ್ಷ ಟಿ.ಹಂಪಣ್ಣ, ಆರ್.ಚೇತನ್ ಯಳನಾಡು, ಎಂ.ಎಸ್.ಪ್ರಭು, ಬಿ.ಓ.ಶಿವಕುಮಾರ್, ಎಂ.ಶಶಿಕಲ ಇನ್ನು ಅನೇಕ ರೈತ ಮುಖಂಡರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


