ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣದ ಕ್ರಷರ್ ಕ್ವಾರಿಯಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕೆಂಗೇರಿಯ ಆರ್.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆಯು ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಸರ್ಕಾರದ ವೈಫಲ್ಯ ಬಯಲಾಗಿದೆ:
ಈ ಭೀಕರ ದುರಂತವು ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನ ಮತ್ತು ಸುರಕ್ಷತಾ ನಿಯಮಗಳ ಅನುಷ್ಠಾನದಲ್ಲಿನ ಸಂಪೂರ್ಣ ವೈಫಲ್ಯವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಗಣಿಗಾರಿಕೆ ನಡೆಯುವ ಸೂಕ್ಷ್ಮ ಪ್ರದೇಶಗಳಲ್ಲಿ ಕಾರ್ಮಿಕರ ಜೀವ ರಕ್ಷಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಗಾಯಾಳುಗಳಿಗೆ ಅತ್ಯುತ್ತಮ ಹಾಗೂ ಉಚಿತ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ವೈದ್ಯರಿಗೆ ಮನವಿ ಮಾಡಿದ ಅವರು, ಗಾಯಗೊಂಡ ಕಾರ್ಮಿಕರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು.
ಕಟ್ಟುನಿಟ್ಟಿನ ಸುರಕ್ಷತಾ ಕ್ರಮಕ್ಕೆ ಆಗ್ರಹ:
ದುರಂತದಲ್ಲಿ ಮೃತಪಟ್ಟ ಬಡ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ನ್ಯಾಯ ದೊರಕಬೇಕು. ಕ್ವಾರಿಯ ಮಾಲೀಕರು ಸೇರಿದಂತೆ ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮೃತರ ಕುಟುಂಬಗಳಿಗೆ ಸರ್ಕಾರ ತಕ್ಷಣವೇ ಸಮರ್ಪಕ ಆರ್ಥಿಕ ಪರಿಹಾರ ವಿತರಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ರಾಜ್ಯದ ಎಲ್ಲಾ ಕಲ್ಲು ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆರ್. ಅಶೋಕ್ ಮತ್ತೊಮ್ಮೆ ಸರ್ಕಾರವನ್ನು ಬಲವಾಗಿ ಆಗ್ರಹಿಸಿದರು.



