ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ ಬರದ ಭೀತಿ ಆವರಿಸಿದ್ದರೂ ಮತ್ತು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಜನ ಪರದಾಡುವ ಪರಿಸ್ಥಿತಿ ಇದ್ದರೂ, ಕಾಂಗ್ರೆಸ್ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿರುವ ಅವರು, "ನಾಡದ್ರೋಹಿ ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ಮತ್ತೊಮ್ಮೆ ಮಹಾದ್ರೋಹ ಎಸಗಲಾಗಿದೆ" ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಕನ್ನಡಿಗರ ಬೆನ್ನಿಗೆ ಚುಚ್ಚಿದ ಚೂರಿ!:
ಕುಡಿಯುವ ನೀರಿನ ನೆಪವೊಡ್ಡಿ ಕಾವೇರಿ ಕೊಳ್ಳದ ಜೀವನಾಡಿ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಲಾಗುತ್ತಿದೆ ಎಂದು ಆರೋಪಿಸಿರುವ ಆರ್. ಅಶೋಕ್, ಅಂಕಿ-ಅಂಶಗಳೊಂದಿಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ:
"ಕಳೆದ ಮೂರು ದಿನಗಳಿಂದ ಪ್ರತಿದಿನ 2,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ. ಇದು ಕನ್ನಡಿಗರ ಬೆನ್ನಿಗೆ ಚುಚ್ಚುತ್ತಿರುವ ಚೂರಿಯಲ್ಲದೆ ಮತ್ತಿನ್ನೇನು ಮುಖ್ಯಮಂತ್ರಿಗಳೇ?" ಎಂದು ಅವರು ಪ್ರಶ್ನಿಸಿದ್ದಾರೆ.
ಅಧಿಕಾರಕ್ಕಾಗಿ ತಮಿಳುನಾಡಿಗೆ ಶರಣಾಗತಿ: ಇತಿಹಾಸವೇ ಇಷ್ಟು!
ಕಾಂಗ್ರೆಸ್ ಪಕ್ಷದ ಇತಿಹಾಸವೇ ಇಂತಹ ನಾಟಕಗಳಿಂದ ಕೂಡಿದೆ ಎಂದು ಜರೆದಿರುವ ಅವರು, ಕಾಂಗ್ರೆಸ್ನ ಎರಡು ಮುಖಗಳನ್ನು ಬಿಚ್ಚಿಟ್ಟಿದ್ದಾರೆ.
ಅಧಿಕಾರವಿಲ್ಲದಾಗ "ನಮ್ಮ ನೀರು ನಮ್ಮ ಹಕ್ಕು" ಅಂತ ನಾಟಕದ ಬೊಬ್ಬೆ ಹೊಡೆಯುತ್ತಾರೆ. ಅಧಿಕಾರ ಸಿಕ್ಕಾಗ "ನಮ್ಮ ನೀರು ತಮಿಳುನಾಡಿನ ಹಕ್ಕು" ಅಂತ ಅಧಿಕಾರಕ್ಕಾಗಿ ತಮಿಳುನಾಡಿನ ಎದುರು ಸಂಪೂರ್ಣ ಶರಣಾಗತಿಯಾಗುತ್ತಾರೆ.
"ನಾಡಿನ ಜನತೆಯ ಹಿತ ಕಾಯದೆ, ಕೇವಲ ರಾಜಕೀಯ ಮೈತ್ರಿ ಮತ್ತು ಅಧಿಕಾರದ ಆಸೆಗಾಗಿ ಹೈಕಮಾಂಡ್ ಅಣತಿಯಂತೆ ಅಂದು ಡಿಎಂಕೆ, ಇಂದು ಟಿವಿಕೆ ಜೊತೆ ಮೈತ್ರಿ ಮಾಡಿಕೊಂಡು ಕನ್ನಡಿಗರಿಗೆ ಪದೇ ಪದೇ ಅನ್ಯಾಯ ಮಾಡುತ್ತಿದ್ದಾರೆ" ಎಂದು ಅವರು ಆರೋಪಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರಿಗೆ ನೇರ ಪ್ರಶ್ನೆಗಳು:
ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಹರಿಹಾಯ್ದಿದ್ದಾರೆ.
"ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆಯ ಬೀದಿನಾಟಕ ಮಾಡಿದ್ದರಲ್ಲ ಸ್ವಾಮಿ, ಈಗ ಯಾವ ಯಾತ್ರೆ ಮಾಡುತ್ತೀರಿ?".
"ನೀರಿಲ್ಲದೆ, ಬೆಳೆಯಿಲ್ಲದೆ ಕಾವೇರಿ ಕೊಳ್ಳದ ನಮ್ಮ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಶವಯಾತ್ರೆ ಮಾಡ್ತೀರಾ?"
"ಬೆಂಗಳೂರಿನ ಜನ ಟ್ಯಾಂಕರ್ ಮಾಫಿಯಾ ಸುಲಿಗೆಗೆ ಸಿಕ್ಕಿ ಪರದಾಡಿದರೆ ಟ್ಯಾಂಕರ್ ಯಾತ್ರೆ ಮಾಡುತ್ತೀರಾ?"
ಜನತೆ ತಕ್ಕ ಪಾಠ ಕಲಿಸುವುದು ನಿಶ್ಚಿತ:
ಕನ್ನಡ ನಾಡಿನ ಜನತೆಗೆ ಕನಿಷ್ಠ ನೀರಿನ ಭದ್ರತೆ ಹಾಗೂ ನೀರಿನ ಹಕ್ಕು ನೀಡಲಾಗದ ಈ "ನಾಡದ್ರೋಹಿ" ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.



