ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರಿಗೆ 2026-27ನೇ ಸಾಲಿನ ಶಿಷ್ಯವೇತನ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಆಗಸ್ಟ್ 25 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಗಸ್ಟ್ 25 ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶ್ರೀರಾಮ ಕಾಂಪ್ಲೆಕ್ಸ್, 1ನೇ ಮಹಡಿ, ಆಂಜನೇಯ ದೇವಸ್ಥಾನದ ಎದುರು, ಸ್ಟೇಡಿಯಂ ರಸ್ತೆ, ಚಿತ್ರದುರ್ಗ ಕಛೇರಿಯಲ್ಲಿ ಪಡೆದು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಪಾರ್ಸಿ, ಬೌದ್ಧ ಅಥವಾ ಸಿಖ್ ಸಮುದಾಯಕ್ಕೆ ಸೇರಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಒಳಗೆ ಎಲ್.ಎಲ್.ಬಿ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ವಯೋಮಿತಿ 38 ವರ್ಷ ಮೀರಬಾರದು. ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮೀರಿರಬಾರದು ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸುವುದು ಕಡ್ಡಾಯ.
ಅಭ್ಯರ್ಥಿಯು ‘ಬಾರ್ ಕೌನ್ಸಿಲ್'ನಲ್ಲಿ ನೋಂದಾಯಿತರಾಗಿರಬೇಕು. ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ ಕನಿಷ್ಠ 15 ವರ್ಷಗಳ ಸೇವಾ ಅನುಭವ ಹೊಂದಿರುವ ವಕೀಲರ ಬಳಿ ಚಿತ್ರದುರ್ಗ ಜಿಲ್ಲೆಯಲ್ಲಿಯೇ ತರಬೇತಿ ಪಡೆಯುತ್ತಿರುವ ಬಗ್ಗೆ ಲಿಖಿತ ಪ್ರಮಾಣ ಪತ್ರ ಸಲ್ಲಿಸಬೇಕು. ಈಗಾಗಲೇ ಯಾವುದೇ ಉದ್ಯೋಗದಲ್ಲಿರುವ ನೌಕರರಿಗೆ ಅವಕಾಶವಿರುವುದಿಲ್ಲ. ಅಪೂರ್ಣ ಹಾಗೂ ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235134 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.



