ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಅಂಗವಾಗಿ ನಗರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ವಿಶೇಷ 'ಶ್ರಮಿಕ ದಿವಸ್' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಜ್ಯ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾಲ್ಗೊಂಡು ಕಾಯಕ ಯೋಗಿಗಳಿಗೆ ವಂದನೆ ಸಲ್ಲಿಸಿದರು.
ಶ್ರಮಿಕರ ಶಕ್ತಿಗೆ ಗೌರವ:
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, "ಕಾಯಕವನ್ನೇ ನಂಬಿ, ದೇಶವನ್ನು ಕಟ್ಟಿ ಬೆಳೆಸುವಲ್ಲಿ ನಮ್ಮ ಕಾರ್ಮಿಕರ ಪಾತ್ರ ಅನನ್ಯವಾದುದು. ದೇಶದ ಅಭಿವೃದ್ಧಿಯ ಬೆನ್ನೆಲುಬಾಗಿರುವ ಶ್ರಮಿಕ ವರ್ಗಕ್ಕೆ ನಾವು ಸದಾ ಚಿರಋಣಿ," ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಕಾರ್ಮಿಕರನ್ನು ಸಾಂಕೇತಿಕವಾಗಿ ಸನ್ಮಾನಿಸಿ, ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಮುಖ ನಾಯಕರು ಮತ್ತು ಪ್ರಕೋಷ್ಟದ ಪದಾಧಿಕಾರಿಗಳು ಭಾಗವಹಿಸಿದ್ದರು.ಪ್ರಕೋಷ್ಟಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಬೆಂಗಳೂರು ಉತ್ತರ ಅಧ್ಯಕ್ಷ ಹರೀಶ್, ಅಸಂಘಟಿತ ಕಾರ್ಮಿಕರ ಪ್ರಕೋಷ್ಟ ಸಂಚಾಲಕ ರಾಜೇಶ್, ಸಹ-ಸಂಚಾಲಕ ಸಚಿನ್ ಗೌಡ, ಮಾಜಿ ಶಾಸಕ ಎಂ. ಡಿ. ಲಕ್ಷ್ಮೀನಾರಾಯಣ, ಬಿಜೆಪಿ ಮುಖಂಡ ಅರುಣ್ ಸೋಮಣ್ಣ ಸೇರಿದಂತೆ ಮತ್ತಿತರರು ಇದ್ದರು.
ಅಸಂಘಟಿತ ಕಾರ್ಮಿಕರ ಹಿತರಕ್ಷಣೆ ಮತ್ತು ಅವರ ಸಬಲೀಕರಣದ ಕುರಿತು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು. ನೂರಾರು ಕಾರ್ಯಕರ್ತರು ಮತ್ತು ಕಾರ್ಮಿಕ ಬಂಧುಗಳು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.


