ಚಂದ್ರವಳ್ಳಿ ನ್ಯೂಸ್, ಗಂಗಾವತಿ:
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ್ ಕುರುಬರ್ (ಜೆಎನ್ಎನ್ ವೆಂಕಿ) ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಆರು ಮಂದಿ ಅಪರಾಧಿಗಳಿಗೆ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ಆದೇಶಿಸಿದ್ದಾರೆ.
ಶಿಕ್ಷೆಗೊಳಗಾದ ಅಪರಾಧಿಗಳು. ಕೋರ್ಟ್ನಿಂದ ಗಲ್ಲು ಶಿಕ್ಷೆಗೆ ಗುರಿಯಾದ ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ, ಗಂಗಾಧರ ಗೌಳಿ.
ನ್ಯಾಯಾಧೀಶರ ಕಡಕ್ ಮಾತುಗಳು:
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಅಪರಾಧಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಕೂಲಂಕಷವಾಗಿ ಪರಿಶೀಲಿಸಿದರು. "ಒಬ್ಬ ವ್ಯಕ್ತಿ (ಮಾರುತಿ) ಕೊಲೆಯಾದಾಗ ಸಾಕ್ಷಿಯಾಗಿ ನಿಂತ ಹಾಗೂ ಆತನ ಚಿಕಿತ್ಸೆಗೆ ಬೆಂಬಲ ನೀಡಿದ ಎಂಬ ಏಕೈಕ ಕಾರಣಕ್ಕೆ ವೆಂಕಟೇಶನನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಅಕ್ಷಮ್ಯ. ಸಭ್ಯ ನಾಗರಿಕ ಸಮಾಜದಲ್ಲಿ ಇಂತಹ ಕೃತ್ಯಗಳಿಗೆ ಸ್ಥಾನವಿಲ್ಲ," ಎಂದು ಅಭಿಪ್ರಾಯಪಟ್ಟ ನ್ಯಾಯಾಧೀಶರು, ಅಪರಾಧದ ಗಂಭೀರತೆಯನ್ನು ಪರಿಗಣಿಸಿ ಈ ಪರಮೋಚ್ಚ ಶಿಕ್ಷೆ ಪ್ರಕಟಿಸಿದರು.

ಏನಿದು ಪ್ರಕರಣ?:
2025ರ ಅಕ್ಟೋಬರ್ 8ರ ಮಧ್ಯರಾತ್ರಿ ಗಂಗಾವತಿಯ ರಾಣಾ ಪ್ರತಾಪ್ ಸಿಂಗ್ ವೃತ್ತದ ಬಳಿ ಈ ಘಟನೆ ನಡೆದಿತ್ತು. ಊಟ ಮುಗಿಸಿ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೆಂಕಟೇಶ್ ಅವರನ್ನು ಕಾರಿನಲ್ಲಿ ಹಿಂಬಾಲಿಸಿದ ಆರೋಪಿಗಳ ತಂಡ, ವಾಹನಕ್ಕೆ ಡಿಕ್ಕಿ ಹೊಡೆದು ಕೆಳಕ್ಕೆ ಉರುಳಿಸಿತ್ತು. ಬಳಿಕ ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.
ಕೊಲೆಗೆ ಕಾರಣವೇನು?:
ಈ ಹಿಂದೆ ಗಂಗಾವತಿ ರೈಲ್ವೆ ನಿಲ್ದಾಣದ ಬಳಿ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು. ಈ ಹಳೆ ಪ್ರಕರಣದಲ್ಲಿ ವೆಂಕಟೇಶ್ ಪ್ರತ್ಯಕ್ಷ ಸಾಕ್ಷಿಯಾಗಿದ್ದರು ಮತ್ತು ಮಾರುತಿಯ ಚಿಕಿತ್ಸೆಗೆ ನೆರವಾಗಿದ್ದರು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆರೋಪಿಗಳು ವೆಂಕಟೇಶನನ್ನು ಗುರಿ ಮಾಡಿದ್ದರು ಎಂದು ಪೊಲೀಸ್ ತನಿಖೆ ದೃಢಪಡಿಸಿತ್ತು.
ಮೇಲ್ಮನವಿಗೆ ಅವಕಾಶ: "ನ್ಯಾಯಾಲಯವು ಆರು ಜನರಿಗೂ ಗಲ್ಲು ಶಿಕ್ಷೆ ವಿಧಿಸಿದೆ. ಅಪರಾಧಿಗಳು ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ," ಎಂದು ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿದ್ದಾರೆ.


