ಚಂದ್ರವಳ್ಳಿ ನ್ಯೂಸ್,ಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆಗಳಿದ್ದು, ತೀವ್ರ ಊಹಾಪೋಹಗಳು ಎದ್ದಿವೆ.
ಇದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಮೇ 28, ಗುರುವಾರ) ಬೆಳಗ್ಗೆ 10.30ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ (CMO) ಉನ್ನತ ಮೂಲಗಳು ಖಚಿತಪಡಿಸಿವೆ.
ಈ ದಿಢೀರ್ ಬೆಳವಣಿಗೆಯು ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂಬ ಚರ್ಚೆಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.
ಹೈಕಮಾಂಡ್ ಸೂತ್ರ ಮತ್ತು ರಾಜೀನಾಮೆ ಸಾಧ್ಯತೆ?
ಕಾಂಗ್ರೆಸ್ ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕತ್ವ, ವಿಶೇಷವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಯಲ್ಲಿ ಸುದೀರ್ಘ ಗಂಟೆಗಳ ಕಾಲ ಪ್ರತ್ಯೇಕ ಹಾಗೂ ಜಂಟಿ ಮಾತುಕತೆ ನಡೆಸಿದ್ದರು. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆ ಮುಗಿಯುತ್ತಿದ್ದಂತೆ ನಾಯಕತ್ವ ಬದಲಾವಣೆಯ ಅಂತಿಮ ಪ್ರಕ್ರಿಯೆ ನಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಅದಕ್ಕೂ ಮುನ್ನವೇ ಈ ಮಹತ್ವದ ಬೆಳವಣಿಗೆ ಸಂಭವಿಸಿದೆ.
ಡಿಕೆಶಿ ಸಿಎಂ ಪಟ್ಟಕ್ಕೆ ಪಟ್ಟು; ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?
2023ರ ವಿಧಾನಸಭಾ ಚುನಾವಣೆ ಯಶಸ್ಸಿನ ಬಳಿಕ ಸಿದ್ದರಾಮಯ್ಯ ಅವರು ಮೊದಲ ಎರಡುವರೆ ವರ್ಷ ಸಿಎಂ ಆಗಿರಲಿದ್ದಾರೆ ಮತ್ತು ಉಳಿದ ಅವಧಿಗೆ ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ನೀಡಲಾಗುವುದು ಎಂಬ 'ಅಧಿಕಾರ ಹಂಚಿಕೆ ಸೂತ್ರ'ದ ಭರವಸೆ ನೀಡಲಾಗಿತ್ತು ಎಂದು ಡಿಕೆಶಿ ಬಣ ಪ್ರತಿಪಾದಿಸುತ್ತಾ ಬಂದಿದೆ.
ಪ್ರಸ್ತುತ ನಾಯಕತ್ವ ಬದಲಾವಣೆ ಒತ್ತಡದ ನಡುವೆ, ಸಿದ್ದರಾಮಯ್ಯ ಅವರಿಗೆ ಕೇಂದ್ರ ಮಟ್ಟದ ಜವಾಬ್ದಾರಿ ಅಥವಾ ರಾಜ್ಯಸಭಾ ಸ್ಥಾನವನ್ನು ನೀಡುವ ಆಫರ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಸಿದ್ದರಾಮಯ್ಯ ಅವರು ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆಯೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ನಾಳೆ ಸಸ್ಪೆನ್ಸ್ ಸಿಡಿಯಲಿದೆ: ಸಿಎಂ ಸಿದ್ದರಾಮಯ್ಯ
ಇಂದು ವಿಧಾನಸೌಧದಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ 62ನೇ ಪುಣ್ಯತಿಥಿ ಅಂಗವಾಗಿ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ಜೊತೆಗಿನ ಚರ್ಚೆಯ ಕುರಿತು ಕೇಳಿದ ಪ್ರಶ್ನೆಗೆ, "ಅದರ ಬಗ್ಗೆ ನಾಳೆ ಮಾತನಾಡುತ್ತೇನೆ" ಎಂದು ಸಂಕ್ಷಿಪ್ತವಾಗಿ ಉತ್ತರಿಸಿ ಕುತೂಹಲ ಕಾಯ್ದುಕೊಂಡಿದ್ದಾರೆ.
ಮಹತ್ವದ ಉಪಹಾರ ಸಭೆ:
ರಾಜ್ಯಪಾಲರ ಭೇಟಿಗೂ ಮುನ್ನ, ನಾಳೆ ಗುರುವಾರ ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮಹತ್ವದ ಉಪಹಾರ ಸಭೆ ನಡೆಸಲಿದ್ದಾರೆ. ಈ ಸಭೆಯ ಬಳಿಕ ರಾಜ್ಯ ರಾಜಕಾರಣದ ಮುಂದಿನ ದಾರಿ ಅಧಿಕೃತವಾಗಿ ಬಹಿರಂಗಗೊಳ್ಳುವ ಸಾಧ್ಯತೆಯಿದೆ.



