ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2030 ರೊಳಗೆ ಹೆಚ್.ಐ.ವಿ/ಏಡ್ಸ್ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಏಡ್ಸ್ ಸುರಕ್ಷಾ ಕಾರ್ಯಕ್ರಮಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಕೆ.ಎಸ್.ಎ.ಪಿ.ಎಸ್ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ. ಗೀತಾ ವಿ. ಮಕ್ಕಣ್ಣವರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರದದಲ್ಲಿ ಶುಕ್ರವಾರ ಚಿತ್ರದುರ್ಗ ಜಿಲ್ಲೆಯ ಕಾರ್ಯಕ್ರಮ, ಹೆಚ್.ಐ.ವಿ./ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಚ್ಐವಿ ಸೋಂಕಿನ ನಿಯಂತ್ರಣ, ಶೀಘ್ರ ಪತ್ತೆ ಹಚ್ಚುವಿಕೆ, ಸೂಕ್ತ ಚಿಕಿತ್ಸೆ ಮತ್ತು ಚಿಕಿತ್ಸೆಯಿಂದ ದೂರ ಉಳಿದಿರುವವರನ್ನು ಪತ್ತೆ ಹಚ್ಚಿ ಪುನಃ ಚಿಕಿತ್ಸೆಗೆ ಒಳಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಚುರುಕಾಗಿ ಕೆಲಸ ಮಾಡಬೇಕಿದೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯದಲ್ಲಿ ಈ ಸೋಂಕಿನ ಬಗ್ಗೆ ತಿಳುವಳಿಕೆ ಕಡಿಮೆಯಾಗುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ದೇಶಾದ್ಯಂತ ಹೆಚ್.ಐ.ವಿ ನಿಯಂತ್ರಣಕ್ಕಾಗಿ ಹಮ್ಮಿಕೊಂಡಿರುವ ‘95-95-99' ರ ವಿಶೇಷ ಗುರಿಯನ್ನು ತಲುಪಲು ಜಿಲ್ಲೆಯಲ್ಲಿ ‘ಮಿಷನ್ ಏಡ್ಸ್ ಸುರಕ್ಷಾ' ಕಾರ್ಯಕ್ರಮವನ್ನು ಚುರುಕುಗೊಳಿಸಲಾಗುವುದು. ಇದರ ಅನ್ವಯ, ಶೇ.95 ರಷ್ಟು ಜನರಿಗೆ ತಮ್ಮ ಎಚ್.ಐ.ವಿ ಸ್ಥಿತಿಯ ಅರಿವಿರಬೇಕು, ಪತ್ತೆಯಾದ ಸೋಂಕಿತರಲ್ಲಿ ಶೇ.95 ರಷ್ಟು ಮಂದಿ ಕಡ್ಡಾಯವಾಗಿ ಎ.ಆರ್.ಟಿ ಚಿಕಿತ್ಸೆಗೆ ಒಳಪಡಬೇಕು ಮತ್ತು ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಶೇ.99 ರಷ್ಟು ಮಂದಿಯಲ್ಲಿ ವೈರಸ್ ಪ್ರಮಾಣ ನಿಯಂತ್ರಣಕ್ಕೆ ಬರಬೇಕು. ಇದರ ಮೇಲ್ವಿಚಾರಣೆಗಾಗಿ ಇನ್ನು ಮುಂದೆ ಪ್ರತಿ ತಿಂಗಳು ಜಿಲ್ಲೆಗೆ ಭೇಟಿ ನೀಡುವುದಾಗಿ ಡಾ. ಗೀತಾ ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಸಿ.ಓ.ಸುಧಾ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ತಿಂಗಳು ಸರಾಸರಿ 25 ರವರೆಗೆ ಹೊಸ ಸೋಂಕಿತರನ್ನು ಪತ್ತೆ ಹಚ್ಚಲಾಗುತ್ತಿದ್ದು, ಅಪಾಯದ ಅಂಚಿನಲ್ಲಿರುವ ಸಮುದಾಯಗಳನ್ನು ಗುರುತಿಸಿ ವಿಶೇಷ ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇನ್ನೂ ಮುಂದೆ ಇವುಗಳನ್ನು ಇನ್ನೂ ಪರಿಣಾಮಕಾರಿಯಾಗಿ ಹಮ್ಮಿಕೊಂಡು ಜಿಲ್ಲೆಯಲ್ಲಿ ಎಚ್ಐವಿ ಏಡ್ಸ್ ನಿಯಂತ್ರಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಡ್ಯಾಪ್ಕೋ ಸಿಬ್ಬಂದಿಗಳು, ಗುರಿ ಆಧಾರಿತ ಸಂಸ್ಥೆಗಳ ಮುಖ್ಯಸ್ಥರು, ಸುಚೇತನ ನೆಟ್ವರ್ಕ್ ಮುಖ್ಯಸ್ಥರು ಇದ್ದರು.



