ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
9 ಮತ್ತು 10ನೇ ತರಗತಿಗಳಿಗೆ ಪಾಠ ಬೋಧಿಸಲು ಪದವಿಪೂರ್ವ (ಪಿಯು) ಉಪನ್ಯಾಸಕರನ್ನು ನಿಯೋಜಿಸುವ ಸರ್ಕಾರದ ಪ್ರಸ್ತಾಪಿತ ಕರಡು ನಿಯಮಗಳ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸಿ ಜುಲೈ ಮೊದಲ ವಾರದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸರ್ಕಾರ ಹೊರಡಿಸಿರುವ ‘ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ಕರಡು ನಿಯಮಗಳು-2026’ ಅನ್ನು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘ ಹಾಗೂ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಪ್ರಾಂಶುಪಾಲರ ಸಂಘಗಳು ತೀವ್ರವಾಗಿ ಖಂಡಿಸಿವೆ ಎಂದು ಅವರು ತಿಳಿಸಿದ್ದಾರೆ.
ಈ ಕರಡು ತಿದ್ದುಪಡಿಯು ಶೈಕ್ಷಣಿಕ ಹಿತದೃಷ್ಟಿಯಿಂದ ಸಮರ್ಥನೀಯವಲ್ಲ ಹಾಗೂ ಆಡಳಿತಾತ್ಮಕವಾಗಿ ಏಕಪಕ್ಷೀಯವಾಗಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ರಾಷ್ಟ್ರೀಯ ಶಾಲಾ ಶಿಕ್ಷಣ ಪಠ್ಯಕ್ರಮ ಚೌಕಟ್ಟು-2023 ಗಳ ಮೂಲ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ. ಯಾವುದೇ ಶೈಕ್ಷಣಿಕ ಸುಧಾರಣೆ ಇಲ್ಲದ ಈ ಪ್ರಸ್ತಾಪವು ಪದವಿಪೂರ್ವ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಲಿದೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳನ್ನು ಅಂಧಕಾರದ ಕೂಪಕ್ಕೆ ತಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
ಪ್ರಮುಖ ಬೇಡಿಕೆಗಳು:
ಕರಡು ನಿಯಮ ಹಿಂಪಡೆಯಿರಿ: ‘ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ಕರಡು ನಿಯಮಗಳು-2026’ ಅನ್ನು ತಕ್ಷಣವೇ ಹಿಂಪಡೆಯಬೇಕು.
ಸ್ವಾಯತ್ತತೆ ರಕ್ಷಿಸಿ: ಪದವಿಪೂರ್ವ ಉಪನ್ಯಾಸಕರ ಸ್ವತಂತ್ರ ವೃಂದ ಮತ್ತು ಗೌರವವನ್ನು ರಕ್ಷಿಸಬೇಕು.
ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೋಧಿಸಲು ವಿಶೇಷವಾಗಿ ನೇಮಕಗೊಂಡಿರುವ ಗೆಜೆಟೆಡ್ ಗ್ರೂಪ್-ಬಿ ಶೈಕ್ಷಣಿಕ ವೃಂದದ ಉಪನ್ಯಾಸಕರನ್ನು ಪ್ರೌಢಶಾಲಾ ಬೋಧನೆಗೆ ನಿಯೋಜಿಸುವುದು ಅವರ ಸೇವಾ ಘನತೆಗೆ ಧಕ್ಕೆ ತರಲಿದೆ.
ಸಮಾಲೋಚನೆ ನಡೆಸಿ: ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರ ಸಂಘಟನೆಗಳೊಂದಿಗೆ ಸಮಗ್ರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿ, ಸೂಕ್ತ ಸಮಾಲೋಚನೆ ನಡೆಸಿದ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಬೇಕು.
ಒಗ್ಗಟ್ಟಿನ ಹೋರಾಟಕ್ಕೆ ಕರೆ
ಕಳೆದ ಜೂನ್ 21, 2026 ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಸಾರ್ವಜನಿಕರು, ಪೋಷಕರು, ಮತ್ತು ಜನಪ್ರತಿನಿಧಿಗಳು ಈ ನ್ಯಾಯಸಮ್ಮತ ಹೋರಾಟಕ್ಕೆ ಕೈಜೋಡಿಸಬೇಕಾಗಿ ವಿನಂತಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪಿ.ಎಂ.ಜಿ ರಾಜೇಶ್, ಉಪಾಧ್ಯಕ್ಷ ಕೇಶವ, ಕಾರ್ಯದರ್ಶಿ ವಸಂತ್, ಸಹಕಾರ್ಯದರ್ಶಿ ಜಗದೀಶ್ ಮತ್ತು ಕರ್ನಾಟಕ ರಾಜ್ಯ ಸದಸ್ಯರ ನೌಕರರ ಸಂಘದ ಪಿಯು ವಿಭಾಗದ ಪ್ರಾಂಶುಪಾಲರಾದ ನಾಗರಾಜ್ .ಎ ಅವರುಗಳು ಬೆಂಬಲ ವ್ಯಕ್ತಪಡಿಸಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
"ಪದವಿಪೂರ್ವ ಶಿಕ್ಷಣ ಉಳಿಸಿ – ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಿ" ಎಂಬ ಘೋಷಣೆಯೊಂದಿಗೆ ಈ ಹೋರಾಟ ರಾಜ್ಯಾದ್ಯಂತ ತೀವ್ರಗೊಳ್ಳಲಿದೆ ಎಂದು ಸಂಘಟನೆಗಳು ಎಚ್ಚರಿಸಿವೆ.



