ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಸೇವಾಸಿಂಧು ಫೋರ್ಟಲ್ ಮೂಲಕ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಪಾಸಿನ ಮೊತ್ತ ಮರುಪಾವತಿ ಮಾಡಲು ಕ್ರಮ ಕೈಗೊಂಡಿದೆ.
ರಾಜ್ಯ ಸರ್ಕಾರದ ಆದೇಶದನ್ವಯ, ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಪ್ರಯಾಣಿಸುವ ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಈಗಾಗಲೇ ದಿನಾಂಕ 29-05-2026 ರಿಂದ ಶುಲ್ಕ ಪಾವತಿಸಿ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಹಣವನ್ನು ಮರುಪಾವತಿ ಮಾಡಲು ಇಲಾಖೆ ಅನುಮೋದನೆ ನೀಡಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಸರ್ಕಾರದ ಸೇವಾಸಿಂಧು ಫೋರ್ಟಲ್ ಲಿಂಕ್ (https://sevasindhuservices.karnataka.gov.in/buspassservices/) ಮೂಲಕ ತಮ್ಮ ಮೊಬೈಲ್ ಸಂಖ್ಯೆ ಹಾಗೂ ಒಟಿಪಿ ನಮೂದಿಸಿ ಆನ್ಲೈನ್ ಅರ್ಜಿ ಸಲ್ಲಿಸಬೇಕು. ನಂತರ ಆಧಾರ್ ಆಧಾರಿತ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ತಮ್ಮ ಅಥವಾ ತಮ್ಮ ಪೋಷಕರ ಬ್ಯಾಂಕ್ ಖಾತೆಯ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು.
ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣ ಜಮೆಯಾಗಲಿದೆ ಹಾಗೂ ಈ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಸಂದೇಶ ಬರಲಿದೆ. ಹಣವು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗುವುದರಿಂದ ವಿದ್ಯಾರ್ಥಿಗಳು ಈ ಸಂಬಂಧ ಯಾವುದೇ ಕೌಂಟರ್ಗಳಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ ಎಂದು ಕೆಎಸ್ಆರ್ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.



