ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ
ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ ನಿರ್ದೇಶಕರ ಚುನಾವಣೆಗೆ ಬಿಜೆಪಿ–ಜೆಡಿಎಸ್ (ಎನ್ಡಿಎ) ಮೈತ್ರಿ ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಅಭ್ಯರ್ಥಿಗಳು ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಬಳಿಕ ಮಿತ್ರಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಮೆರವಣಿಗೆಯೊಂದಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಸಹಕಾರ ಸಂಘವು ರೈತರ ಅಭಿವೃದ್ಧಿಗೆ ಪ್ರಮುಖ ವೇದಿಕೆಯಾಗಿದ್ದು, ಪಾರದರ್ಶಕ ಆಡಳಿತ, ರೈತಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಎನ್ಡಿಎ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
'ಸಹಕಾರ ಸಂಘದ ಅಭಿವೃದ್ಧಿ, ರೈತರ ಹಿತಾಸಕ್ತಿ ಮತ್ತು ಉತ್ತಮ ಆಡಳಿತದ ಸಂಕಲ್ಪದೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಮತದಾರರು ಬೆಂಬಲ ನೀಡುವ ವಿಶ್ವಾಸವಿದೆ' ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಎನ್ಡಿಎ ಅಭ್ಯರ್ಥಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಬೆಂಬಲಿಗರು ಉಪಸ್ಥಿತರಿದ್ದರು.



