ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಂಧಿಸಲಾಗಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ನನ್ನು ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಹೆಚ್ಚಿನ ತನಿಖೆಗಾಗಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಶಂಕಿತ ಉಗ್ರನಿಗೆ ಕಡ್ಡಾಯ ವೈದ್ಯಕೀಯ ಪರೀಕ್ಷೆ (ಮೆಡಿಕಲ್ ಟೆಸ್ಟ್) ನಡೆಸಲಾಗಿತ್ತು. ತದನಂತರ ಆತನನ್ನು ಕಟ್ಟುನಿಟ್ಟಿನ ಭದ್ರತೆಯಲ್ಲಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು.
ಕಣ್ಗಾವಲಿನಲ್ಲಿ ಶಂಕಿತ ಉಗ್ರ: NIA ಮತ್ತು ATU ಎಂಟ್ರಿ;
ಪಾಕಿಸ್ತಾನದ ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸುಹೇಲ್ ನಿರಂತರ ಸಂಪರ್ಕದಲ್ಲಿದ್ದ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ, ತನಿಖೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ.
ಜಂಟಿ ಕಾರ್ಯಾಚರಣೆ: ಹರಿಹರ ಗ್ರಾಮಾಂತರ ಠಾಣೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಭಯೋತ್ಪಾದನಾ ನಿರೋಧಕ ಪಡೆ (ATU) ಯ ಎರಡು ಪ್ರತ್ಯೇಕ ತಂಡಗಳಿಂದ ನಾಲ್ವರು ಹಿರಿಯ ಅಧಿಕಾರಿಗಳು ಆಗಮಿಸಿದ್ದಾರೆ.
ತೀವ್ರ ವಿಚಾರಣೆ: ಈ ಎರಡೂ ಉನ್ನತ ತನಿಖಾ ಸಂಸ್ಥೆಗಳು ಜಂಟಿಯಾಗಿ ಶಂಕಿತ ಉಗ್ರನನ್ನು ತೀವ್ರ ವಿಚಾರಣೆಗೆ ಒಳಪಡಿಸಲಿವೆ.
ಸ್ಥಳೀಯ ಪೊಲೀಸರ ಸಾಥ್: ದೇಶವಿರೋಧಿ ಸಂಚಿನ ಕುರಿತು ಮತ್ತಷ್ಟು ಸ್ಫೋಟಕ ಮಾಹಿತಿಗಳನ್ನು ಕಲೆಹಾಕಲು ರಾಷ್ಟ್ರೀಯ ತನಿಖಾ ತಂಡಗಳಿಗೆ ದಾವಣಗೆರೆ ಜಿಲ್ಲಾ ಪೊಲೀಸರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ.
ಪಾಕಿಸ್ತಾನದ ಲಿಂಕ್ಗಳು ಹಾಗೂ ಕರ್ನಾಟಕದಲ್ಲಿ ಈತ ಅಡಗಿಕೊಂಡಿದ್ದರ ಹಿಂದಿನ ಅಸಲಿ ಉದ್ದೇಶವೇನು ಎಂಬುದನ್ನು ಪತ್ತೆಹಚ್ಚಲು ಈ 10 ದಿನಗಳ ಕಸ್ಟಡಿ ಅವಧಿಯಲ್ಲಿ ತನಿಖಾಧಿಕಾರಿಗಳು ಜಾಲ ಬೀಸಲಿದ್ದಾರೆ.



