*ಸಂಸದ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಕೆ*
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) 2010ಕ್ಕಿಂತ ಮೊದಲು ನೇಮಕಗೊಂಡಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪೂರ್ವಾನ್ವಯವಾಗುವಂತೆ ಕಡ್ಡಾಯಗೊಳಿಸಿರುವುದನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಿತ್ರದುರ್ಗ ಜಿಲ್ಲಾ ಸಂಘ ಒತ್ತಾಯಿಸಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನಿಯೋಗ ಸಂಸದ ಗೋವಿಂದ ಎಂ.ಕಾರಜೋಳ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸುಪ್ರೀಂ ಕೋರ್ಟ್ ಟಿಇಟಿ ಪರೀಕ್ಷೆ ಕಡ್ಡಾಯಗೊಳಿಸಿದ್ದು, ಎಲ್ಲಾ ಶಿಕ್ಷಕರು ಕಾಲಮಿತಿಯೊಳಗೆ ಟಿಇಟಿ ಪರೀಕ್ಷೆ ಪಾಸ್ ಆಗಬೇಕಿದೆ. ಇದು ಸರಿಯಾದ ಕ್ರಮವಲ್ಲ ಅಸಮಾಧಾನ ವ್ಯಕ್ತಪಡಿಸಿದರು.
2002ರಲ್ಲಿ ಸಂವಿಧಾನದ 21ಎ ವಿಧಿಯನ್ನು ಜಾರಿಗೆ ತರಲಾಯಿತು. ಅದರನ್ವಯ 2009ರಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು (ಆರ್ಟಿಇ) ತರಲಾಗಿದ್ದು, 2010ರ ಏಪ್ರಿಲ್ 1 ರಿಂದ ಜಾರಿಗೆ ಬಂದಿದೆ. ಈ ಕಾಯ್ದೆಯ ಎನ್ಸಿಟಿಇ ನಿಯಮಾವಳಿಗಳ ಪ್ರಕಾರ ಟಿಇಟಿ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಯಾವುದೇ ಹೊಸ ನಿಯಮ ಅಥವಾ ಕಾಯ್ದೆ ಜಾರಿಗೆ ಬಂದಾಗ ಅದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸುವುದು ಸಹಜ ನ್ಯಾಯವಲ್ಲ. 2010ರ ನಂತರ ನೇಮಕಗೊಂಡಿರುವ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸುವುದಕ್ಕೆ ನಮ್ಮ ಯಾವುದೇ ಆಕ್ಷೇಪವಿಲ್ಲ. ಆದರೆ, ಅದಕ್ಕಿಂತ ಮುಂಚಿತವಾಗಿ ನೇಮಕಗೊಂಡು ಸುದೀರ್ಘ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಇದನ್ನು ಕಡ್ಡಾಯ ಮಾಡಿರುವುದು ಅವೈಜ್ಞಾನಿಕವಾಗಿದೆ ಎಂದರು.
ಮುಂದಿನ ಸಂಸತ್ ಅಧಿವೇಶನದಲ್ಲಿ ನಮ್ಮ ರಾಜ್ಯದ ಹಾಗೂ ದೇಶದ ಶಿಕ್ಷಕರ ಪರವಾಗಿ ಈ ನ್ಯಾಯಯುತ ಬೇಡಿಕೆಯನ್ನು ಮಂಡಿಸಬೇಕು. ಕಳೆದ ಫೆಬ್ರವರಿ 24 ರಂದು ದೆಹಲಿಯ ಜಂತರ್ ಮಂತರ್ನಲ್ಲಿ ದೇಶಾದ್ಯಂತದ ಶಿಕ್ಷಕರು ಸೇರಿ ಬೃಹತ್ ಪ್ರತಿಭಟನೆ ನಡೆಸಿದ್ದೇವೆ. ಜನಪ್ರತಿನಿಧಿಗಳು ನಮ್ಮ ಧ್ವನಿಯಾಗಬೇಕು ಎಂದು ಮನವಿ ಮಾಡಿದರು.
2010ಕ್ಕಿಂತ ಹಿಂದಿನ ಶಿಕ್ಷಕರಿಗೆ ಟಿಇಟಿಯಿಂದ ವಿನಾಯಿತಿ ನೀಡುವ ನಿಟ್ಟಿನಲ್ಲಿ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಶಿಕ್ಷಕರ ಸಂಘವು ಈ ಮೂಲಕ ಎರಡನೇ ಬಾರಿಗೆ ಲಿಖಿತ ಮನವಿ ಸಲ್ಲಿಸಿದ್ದೇವೆ.
ನಾವುಗಳು ಉನ್ನತ ಶಿಕ್ಷಣ ಪಡೆದು, ಹಲವು ವರ್ಷಗಳಿಂದ ನಿರಂತರವಾಗಿ ಪಾಠ ಪ್ರವಚನಗಳನ್ನು ಮಾಡುತ್ತಾ ಬಂದಿದ್ದೇವೆ. ಸುದೀರ್ಘ ಅನುಭವದ ಆಧಾರದ ಮೇಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಏಕಾಏಕಿ ಕಾಲಮಿತಿಯೊಳಗೆ 'ಟಿಇಟಿ' ಪರೀಕ್ಷೆ ಪಾಸ್ ಆಗಬೇಕು ಎಂದು ಕಡ್ಡಾಯಗೊಳಿಸಿರುವುದು ಶಿಕ್ಷಕ ಸಮುದಾಯಕ್ಕೆ ತೀವ್ರ ನೋವುಂಟು ಮಾಡಿದೆ. ಇದು ಸರಿಯಾದ ಕ್ರಮವಲ್ಲ ಎಂದು ಸಂಘದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಕಾನೂನು ತಿದ್ದುಪಡಿ ತರುವ ಮೂಲಕ ಈ ಕಡ್ಡಾಯ ಟಿಇಟಿ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ಸುದೀರ್ಘ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಸಂಸದರಲ್ಲಿ ಒತ್ತಾಯಿಸಿದರು.
ಶಿಕ್ಷಕರಿಂದ ಮನವಿ ಸ್ವೀಕರಿಸಿದ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಶಿಕ್ಷಕರ ಈ ಗಂಭೀರ ಸಮಸ್ಯೆಯ ಕುರಿತು ಖಂಡಿತವಾಗಿಯೂ ಧ್ವನಿ ಎತ್ತಲಾಗುವುದು. ಶಿಕ್ಷಕ ಸಮುದಾಯಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಆರ್.ಮಾರುತೇಶ್, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಜಿ.ಬಿ.ಮಹಾಂತೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಟಿ. ಹನುಮಂತಪ್ಪ ಸೇರಿದಂತೆ ಜಿಲ್ಲೆಯ ಆರು ತಾಲ್ಲೂಕುಗಳ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.



