ಚಂದ್ರವಳ್ಳಿ ನ್ಯೂಸ್ ಬೆಂಗಳೂರು:
ನಗರದ ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರ ಸಮೀಪ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್ಗಳು ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿವೆ.
ಭಾನುವಾರ ಮಧ್ಯಾಹ್ನ ಸುಮಾರು 3:10 ರ ವೇಳೆಗೆ ಪಾರ್ಕಿಂಗ್ ಸ್ಥಳದಲ್ಲಿದ್ದ ಬಸ್ಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಆಜೂಬಾಜಿನಲ್ಲಿದ್ದ ಇತರ ಬಸ್ಗಳಿಗೂ ಬೆಂಕಿ ವ್ಯಾಪಿಸಿದೆ. ಬಸ್ಗಳಿಂದ ಭಾರಿ ಪ್ರಮಾಣದಲ್ಲಿ ಆಕಾಶದೆತ್ತರಕ್ಕೆ ಹೊಗೆಯ ಜ್ವಾಲೆ ಎದ್ದಿದ್ದರಿಂದ ಸುತ್ತಮುತ್ತಲಿನ ನಿವಾಸಿಗಳು ಮತ್ತು ವಾಹನ ಸವಾರರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪ್ರಾಣಾಪಾಯವಿಲ್ಲ, ಸಮಾಧಾನದ ಸಂಗತಿ: ಘಟನೆ ನಡೆದ ಸಮಯದಲ್ಲಿ ಬಸ್ಗಳಲ್ಲಿ ಚಾಲಕರು, ನಿರ್ವಾಹಕರು ಅಥವಾ ಪ್ರಯಾಣಿಕರು ಯಾರೂ ಇರದ ಕಾರಣ ಸಂಭವಿಸಬಹುದಾಗಿದ್ದ ಭಾರಿ ಪ್ರಾಣಹಾನಿ ತಪ್ಪಿದೆ.
ಸಮಯೋಚಿತ ಕಾರ್ಯಾಚರಣೆ: ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಪಕ್ಕದಲ್ಲಿದ್ದ ಇತರ ಆಸ್ತಿ-ಪಾಸ್ತಿ ಹಾಗೂ ವಾಹನಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ಕೋಟ್ಯಂತರ ಮೌಲ್ಯದ ನಷ್ಟ: ಬೆಂಕಿಯ ರಭಸಕ್ಕೆ ನಾಲ್ಕೂ ಖಾಸಗಿ ಬಸ್ಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಅಪಾರ ಪ್ರಮಾಣದ ಆರ್ಥಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ತನಿಖೆ ಪ್ರಗತಿಯಲ್ಲಿ: ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಯಾವುದೇ ತಾಂತ್ರಿಕ ಲೋಪದಿಂದ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಕುರಿತು ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಸಮಗ್ರ ತನಿಖೆ ಕೈಗೊಂಡಿದ್ದಾರೆ.



