ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ಶಿಕ್ಷಣವು ವಿದ್ಯಾರ್ಥಿಯ ಬದುಕನ್ನು ರೂಪಿಸುವುದಷ್ಟೇ ಅಲ್ಲದೆ ರಾಷ್ಟ್ರದ ಅಭಿವೃದ್ಧಿಯ ಅಡಿಪಾಯವೂ ಆಗಿದೆ. ಯಾವುದೇ ರಾಷ್ಟ್ರದ ಪ್ರಗತಿಯು ಅಲ್ಲಿನ ಶಿಕ್ಷಣ ವ್ಯವಸ್ಥೆಯ ಗುಣಮಟ್ಟದೊಂದಿಗೆ ಅವಲಂಬಿತವಾಗಿರುತ್ತದೆ. ಶಿಕ್ಷಣದಲ್ಲಿ ಪರೀಕ್ಷೆಗಳು ವಿದ್ಯಾರ್ಥಿಗಳ ಜ್ಞಾನ, ಸಾಮರ್ಥ್ಯ ಹಾಗೂ ಅರ್ಹತೆಯನ್ನು ಮೌಲ್ಯಮಾಪನ ಮಾಡುವ ಒಂದು ಪ್ರಮುಖ ಸಾಧನವಾಗಿದೆ.
ಆದ್ದರಿಂದ ಪರೀಕ್ಷಾ ವ್ಯವಸ್ಥೆಯು ಪಾರದರ್ಶಕ, ವಿಶ್ವಾಸಾರ್ಹ ಮತ್ತು ನ್ಯಾಯಸಮ್ಮತವಾಗಿರಬೇಕು. ಇತ್ತೀಚಿನ ವರ್ಷಗಳಲ್ಲಿ NEET, UGC-NET ಹಾಗೂ ಇತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ದೇಶದಾದ್ಯಂತ ಆತಂಕಕ್ಕೆ ಕಾರಣವಾಗುತ್ತಿದೆ.
ಲಕ್ಷಾಂತರ ವಿದ್ಯಾರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ತಯಾರಿಯಾಗಿ ಪರೀಕ್ಷೆಯನ್ನು ಬರೆದರೂ ಕೆಲವರು ಅಕ್ರಮಗಳ ಮೂಲಕ ಅನ್ಯಾಯದ ಲಾಭ ಪಡೆಯುತ್ತಿರುವುದು ಶಿಕ್ಷಣ ವ್ಯವಸ್ಥೆಯ ಮೇಲೆ ಜನರು ಇಟ್ಟಿರುವ ವಿಶ್ವಾಸವನ್ನು ಕುಗ್ಗಿಸುತ್ತಿದೆ. ಆದ್ದರಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕಾನೂನು ಕ್ರಮಗಳು ಬಹಳ ಅವಶ್ಯಕವಾಗಿದೆ.
ಕೇಂದ್ರ ಸರ್ಕಾರ ಸಾರ್ವಜನಿಕ ಪರೀಕ್ಷೆಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 21 ಜೂನ್ 2024 ರಲ್ಲಿ ಜಾರಿಯಾದ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾಯ್ದೆಗೆ ನ್ಯೂತನವಾಗಿ ಕಠಿಣ ಕಾನೂನು ಕ್ರಮಗಳನ್ನು ಒಳಗೊಂಡ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿಗಳ ಅಂಗೀಕಾರದೊಂದಿಗೆ ಜಾರಿಮಾಡಲಾಗಿದೆ.
ಈ ಮಸೂದೆಯಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು, ಡಿಜಿಟಲ್ ಹ್ಯಾಕಿಂಗ್ ಹಾಗೂ ಪ್ರಶ್ನೆ ಪತ್ರಿಕೆಗಳ ಅಕ್ರಮ ವಿತರಣೆಯನ್ನು ಗಂಭೀರ ಅಪರಾಧಗಳಾಗಿ ಪರಿಗಣಿಸಲಾಗಿದೆ. ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ತಪ್ಪಿತಸ್ಥರಿಗೆ 3 ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹10 ಲಕ್ಷದಿಂದ ₹1 ಕೋಟಿ ರೂಪಾಯಿವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮಗಳಿಂದ ಸರ್ಕಾರಕ್ಕೆ ಉಂಟಾಗುವ ಆರ್ಥಿಕ ನಷ್ಟವನ್ನೂ ತಪ್ಪಿತಸ್ಥರಿಂದಲೇ ವಸೂಲಿ ಮಾಡುವ ಅವಕಾಶ ನೀಡಲಾಗಿದೆ. ಆರೋಪಿಗಳ ತ್ವರಿತ ವಿಚಾರಣೆಗಾಗಿ ಫಾಸ್ಟ್ - ಟ್ರ್ಯಾಕ್ ಕೋರ್ಟ್ ಗಳನ್ನು ಸ್ಥಾಪಿಸಲಾಗಿದೆ. ಹಾಗೂ ಸಂಘಟಿತ ಅಕ್ರಮಗಳಲ್ಲಿ ಭಾಗಿಯಾಗುವ ಸಂಸ್ಥೆಗಳ ಸೇವಾ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಾಗೂ ಅಗತ್ಯವಿದ್ದಲ್ಲಿ ಅವರ ಮೇಲಿನ ನಿಷೇಧದ ಅವಧಿಯನ್ನು ಹೆಚ್ಚಿಸಲು ಸಹ ಅವಕಾಶ ಕಲ್ಪಿಸಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಸರ್ಕಾರ ತಂದಿರುವ ನೂತನ ತಿದ್ದುಪಡಿ ಮಸೂದೆ ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ, ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿಸುವ ಮಹತ್ವದ ಹೆಜ್ಜೆಯಾಗಿದೆ. ಈ ಕಾನೂನು ಕಟ್ಟುನಿಟ್ಟಾಗಿ ಜಾರಿಯಾದರೆ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಬೀಳುವುದರ ಜೊತೆಗೆ ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ನ್ಯಾಯ ದೊರೆಯಲಿದೆ.
ದೇಶದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸರ್ಕಾರ, ಪರೀಕ್ಷಾ ಸಂಸ್ಥೆಗಳು, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಎಲ್ಲರೂ ಜವಾಬ್ದಾರಿಯುತವಾಗಿ ಸಹಕರಿಸಿದಾಗ ಮಾತ್ರ ಈ ಕಾನೂನಿನ ಉದ್ದೇಶ ಸಂಪೂರ್ಣವಾಗಿ ಯಶಸ್ವಿಯಾಗುತ್ತದೆ. ವಿದ್ಯಾರ್ಥಿಗಳು ಕೂಡ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳಲ್ಲಿ ಭಾಗಿಯಾಗಬಾರದು. ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ನಕಲು ಕುರಿತು ಮಾಹಿತಿ ದೊರೆತರೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯೇ ಯಶಸ್ಸಿನ ನಿಜವಾದ ಮಾರ್ಗ ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಮನಗಾಣಬೇಕು.
ಲೇಖನ: ಡಾ. ಎಂ ವಸಂತ್ ಆಚಾರ್, ಅಧ್ಯಕ್ಷರು, ಭಾರತೀಯ ಜನತಾ ಪಾರ್ಟಿ, ಚಿತ್ರದುರ್ಗ ನಗರ ಯುವ ಮೋರ್ಚಾ.



