ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 'ವಿಕಸಿತ ಭಾರತ'ದ ಯಶಸ್ವಿ ನಿರ್ಮಾಣದ ಪ್ರಮುಖ ಜವಾಬ್ದಾರಿ ಮತ್ತು ಹೊಣೆಗಾರಿಕೆ ನಮ್ಮ ದೇಶದ ಪ್ರಬುದ್ಧ ಯುವಶಕ್ತಿಯ ಹೆಗಲ ಮೇಲಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪ್ರಬುದ್ಧ ಯುವಜನತೆಯೊಂದಿಗಿನ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಆದರಣೀಯ ಶ್ರೀ ನಿತಿನ್ ನಬಿನ್ ಜೀ ಅವರ ನೇತೃತ್ವದಲ್ಲಿ ಈ ಮಹತ್ವದ ಸಂವಾದ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಯುವಶಕ್ತಿಗೆ ದಿಕ್ಸೂಚಿ:
ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಜನತೆಯ ಪಾತ್ರ ಅತ್ಯಂತ ದೊಡ್ಡದಾಗಿದೆ. 'ವಿಕಸಿತ ಭಾರತ'ದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಯುವಕರು ಹೇಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಮತ್ತು ದೇಶದ ಪ್ರಗತಿಗೆ ಯಾವ ರೀತಿ ಕೊಡುಗೆ ನೀಡಬೇಕು ಎಂಬ ಕುರಿತು ಕಾರ್ಯಕ್ರಮದಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಪ್ರಬುದ್ಧ ಯುವಜನರೊಂದಿಗೆ ನಾಯಕರು ಸಂವಾದ ನಡೆಸಿ, ಅವರ ಆಲೋಚನೆ ಹಾಗೂ ಉತ್ಸಾಹಕ್ಕೆ ಸಾಥ್ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಎನ್ಡಿಎ ಮೈತ್ರಿಕೂಟದ ಪ್ರಮುಖ ನಾಯಕರು ಹಾಗೂ ಯುವ ಮುಖಂಡರು ಉಪಸ್ಥಿತರಿದ್ದರು.



