ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯೊಂದರಿಂದ ತೀವ್ರ ಸ್ವರೂಪದ ದುರ್ವಾಸನೆ ಹೊರಹೊಮ್ಮುತ್ತಿದ್ದು, ಇದರಿಂದ ಸ್ಥಳೀಯ ವರದನಹಳ್ಳಿ ಗ್ರಾಮಸ್ಥರು ಬದುಕು ನಡೆಸಲು ಹರಸಾಹಸ ಪಡುವಂತಾಗಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ‘ಸೀಡೆಕೋಸಾ ಬಯೋಟೆಕ್ ಲಿಮಿಟೆಡ್’ ಎಂಬ ಖಾಸಗಿ ಕಂಪನಿಯೇ ಈ ಎಲ್ಲ ಅವಾಂತರಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನಿಯಮ ಗಾಳಿಗೆ ತೂರಿದ ಕಂಪನಿ
ಈ ಕಂಪನಿಯು ಸತ್ತಿರುವ ರೇಷ್ಮೆ ಹುಳುಗಳು ಹಾಗೂ ಇನ್ನಿತರ ವಸ್ತುಗಳನ್ನು ಬಳಸಿ ಕೆಮಿಕಲ್ (ರಾಸಾಯನಿಕ) ತಯಾರು ಮಾಡುವ ಘಟಕವಾಗಿದೆ. ಆದರೆ, ಉತ್ಪಾದನಾ ಪ್ರಕ್ರಿಯೆಯ ವೇಳೆ ಹೊರಬರುವ ಭೀಕರ ದುರ್ವಾಸನೆಯನ್ನು ತಡೆಗಟ್ಟಲು ಕಂಪನಿಯು ಯಾವುದೇ ಮುಂಜಾಗ್ರತಾ ಅಥವಾ ವೈಜ್ಞಾನಿಕ ಕ್ರಮಗಳನ್ನು ಕೈಗೊಂಡಿಲ್ಲ. ಹೀಗಾಗಿ ಸುತ್ತಮುತ್ತಲಿನ ಪರಿಸರವೆಲ್ಲ ಕಲುಷಿತಗೊಂಡಿದ್ದು, ಸ್ಥಳೀಯರು ವಾಸನೆ ತಡೆಯಲಾರದೆ ತತ್ತರಿಸಿ ಹೋಗಿದ್ದಾರೆ.
ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ:
ದುರ್ವಾಸನೆಯ ತೊಂದರೆಯ ಕುರಿತು ಸ್ಥಳೀಯರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಆದರೆ, ಜವಾಬ್ದಾರಿಯುತ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುವ ಬದಲಿಗೆ, ತನಿಖೆಗಾಗಿ ಪೌರಕಾರ್ಮಿಕರನ್ನು ಕಳುಹಿಸಿಕೊಟ್ಟಿದ್ದಾರೆ. ಅಧಿಕಾರಿಗಳ ಈ ಬೇಜವಾಬ್ದಾರಿತನದ ನಡೆಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ:
ಸ್ಥಳೀಯರ ನಿರಂತರ ಒತ್ತಾಯ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಅಧಿಕಾರಿಯಾದ ವಿಶಾಲಾಕ್ಷಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿರುವ ಅವರು, ಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸಿಕೊಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.
ಉಗ್ರ ಹೋರಾಟದ ಎಚ್ಚರಿಕೆ:
ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಕೌನ್ಸಿಲರ್ ರಾಮಮೂರ್ತಿ, ಪ್ರಮುಖರಾದ ಅಕ್ಷಯ್, ನಂಜೇಶ್, ಮಹೇಶ್ ಸೇರಿದಂತೆ ವರದನಹಳ್ಳಿ ಗ್ರಾಮದ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು. "ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಈ ದುರ್ವಾಸನೆಯ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಂಪನಿಯ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು" ಎಂದು ಗ್ರಾಮಸ್ಥರು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.



