Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿರುಪತಿ 'ನಿತ್ಯ ಆರತಿ' ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ಪ್ರಸ್ತಾವನೆಗೆ ಟಿಟಿಡಿ ತೀವ್ರ ವಿರೋಧ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು/ತಿರುಪತಿ:
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕರ್ನಾಟಕದ ಜನಪ್ರತಿನಿಧಿಗಳು ಹಾಗೂ ಉನ್ನತಾಧಿಕಾರಿಗಳಿಗೆ ಪ್ರತಿದಿನದ ಮೊದಲ ಆರತಿಯಲ್ಲಿ (ನಿತ್ಯ ಆರತಿ) ಭಾಗವಹಿಸಲು ಅವಕಾಶ ಕಲ್ಪಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಸ್ತಾವನೆಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದು ಈಗ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಟಿಟಿಡಿ ಟ್ರಸ್ಟ್ ಸದಸ್ಯ ಜಿ. ಭಾನುಪ್ರಕಾಶ್ ರೆಡ್ಡಿ, "ತಿರುಪತಿ ದೇವಾಲಯವನ್ನು ರಾಜಕೀಯ ವೇದಿಕೆಯನ್ನಾಗಿಸಬೇಡಿ. ಇದು ಪವಿತ್ರ ಧಾರ್ಮಿಕ ಕ್ಷೇತ್ರ. ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯನ್ನು ತಕ್ಷಣವೇ ಹಿಂಪಡೆಯಬೇಕು" ಎಂದು ಆಗ್ರಹಿಸಿದ್ದಾರೆ.

ಏನಿದು 'ಮೊದಲ ಆರತಿ' ವಿವಾದ?:
ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ತಿರುಪತಿಯಲ್ಲಿ ಪ್ರತಿದಿನ ಬೆಳಿಗ್ಗೆ ನಡೆಯುವ ಮೊದಲ ಆರತಿಯು ಐತಿಹಾಸಿಕವಾಗಿ ಕರ್ನಾಟಕಕ್ಕೆ ಸಂಬಂಧಿಸಿದ ವಿಶೇಷ ಹಕ್ಕಾಗಿದೆ. ಇದುವರೆಗೆ ಕರ್ನಾಟಕ ಸರ್ಕಾರದ ವಿಶೇಷ ಅಧಿಕಾರಿಯೊಬ್ಬರು ಇದರಲ್ಲಿ ಭಾಗವಹಿಸುತ್ತಿದ್ದರು. ಇನ್ನು ಮುಂದೆ ರಾಜ್ಯದ ಪರವಾಗಿ ಭೇಟಿ ನೀಡುವ ಸಚಿವರು, ಶಾಸಕರು, ನ್ಯಾಯಮೂರ್ತಿಗಳು ಹಾಗೂ ಹಿರಿಯ ಅಧಿಕಾರಿಗಳಿಗೂ ಈ ಅವಕಾಶ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ" ಎಂದು ಪ್ರಕಟಿಸಿದ್ದರು.

ರಾಜ್ಯದ ಅನೇಕ ಜನಪ್ರತಿನಿಧಿಗಳು ತಿರುಪತಿಗೆ ಹೋದಾಗ ದರ್ಶನ ಸಿಗದೇ ಹತಾಶರಾಗಿ ಮರಳುತ್ತಿದ್ದಾರೆ. ಹಾಗಾಗಿ ರಾಜ್ಯದ ಪರವಾಗಿ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ದೇವರ ಸನ್ನಿಧಿಯಲ್ಲಿ ನಿಂತು ಮೊದಲ ಆರತಿ ಸ್ವೀಕರಿಸುವ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಸಮರ್ಥಿಸಿಕೊಂಡಿದ್ದರು.

ಟಿಟಿಡಿ ಆಕ್ಷೇಪವೇನು?:
ಮುಖ್ಯಮಂತ್ರಿಗಳ ಈ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಟಿಟಿಡಿ ಸದಸ್ಯ ಭಾನುಪ್ರಕಾಶ್ ರೆಡ್ಡಿ, ಐತಿಹಾಸಿಕ ನಿಯಮಗಳನ್ನು ನೆನಪಿಸಿದ್ದಾರೆ.

ಮಹಾರಾಜರಿಗೆ ಮಾತ್ರ ಹಕ್ಕು: "ತಿರುಮಲದ ಗರ್ಭಗುಡಿಯಲ್ಲಿ ನಡೆಯುವ ಈ ವಿಶೇಷ ಪೂಜೆಯ ಸಂದರ್ಭದಲ್ಲಿ ಮಠಾಧೀಶರು, ಮುಖ್ಯ ಅರ್ಚಕರು ಹಾಗೂ ಐತಿಹಾಸಿಕ ಪರಂಪರೆಯ ಭಾಗವಾಗಿ ಮೈಸೂರು ಮಹಾರಾಜರ ಪ್ರತಿನಿಧಿಗೆ ಮಾತ್ರ ಉಪಸ್ಥಿತರಿರಲು ಅವಕಾಶವಿದೆ. ಈ ಹಕ್ಕು ಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರಿಗಾಗಿ ಅಲ್ಲ."

ಏಕಪಕ್ಷೀಯ ತೀರ್ಮಾನ ಸಾಧ್ಯವಿಲ್ಲ: "ಯಾವುದೇ ಹೊಸ ನಿಯಮವನ್ನು ರಾಜಕೀಯವಾಗಿ ಏಕಪಕ್ಷೀಯವಾಗಿ ಜಾರಿಗೆ ತರಲು ಸಾಧ್ಯವಿಲ್ಲ. ಕರ್ನಾಟಕದ ಈ ಬೇಡಿಕೆಯನ್ನು ಒಪ್ಪಿಕೊಂಡರೆ, ನಾಳೆ ತಮಿಳುನಾಡು, ಕೇರಳ ಸೇರಿದಂತೆ ಇತರ ರಾಜ್ಯಗಳೂ ಇದೇ ರೀತಿಯ ಹಠ ಹಿಡಿಯುತ್ತವೆ."

"ಈ ಪ್ರಸ್ತಾವನೆಯನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ನಾಳೆ ನಡೆಯಲಿರುವ ಟಿಟಿಡಿ ಮಂಡಳಿ ಸಭೆಯಲ್ಲಿ ನಾನು ಮಂಡಿಸಲಿದ್ದೇನೆ."
ಜಿ. ಭಾನುಪ್ರಕಾಶ್ ರೆಡ್ಡಿ, ಟಿಟಿಡಿ ಟ್ರಸ್ಟ್ ಸದಸ್ಯ.

'ಕರ್ನಾಟಕ ಭವನ' ಇತಿಹಾಸ ನೆನೆದ ಸಿಎಂ:
ಇದೇ ಸಂದರ್ಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿಗಳು, ಮೈಸೂರು ಮಹಾರಾಜರ ಕಾಲದಲ್ಲೇ ಕರ್ನಾಟಕಕ್ಕೆ ತಿರುಪತಿಯಲ್ಲಿ ಸುಮಾರು ಏಳು ಎಕರೆ ಜಾಗ ಮಂಜೂರಾಗಿತ್ತು. ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅವಧಿಯಲ್ಲಿ ಅಲ್ಲಿ ಭವ್ಯ 'ಕರ್ನಾಟಕ ಭವನ' ನಿರ್ಮಿಸಲು ಟ್ರಸ್ಟ್ ಸ್ಥಾಪಿಸಲಾಗಿತ್ತು. ಆದರೆ, ಆ ನಂತರ ಸರ್ಕಾರಗಳು ಬದಲಾದ ಕಾರಣ ಆ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ವಿಷಾದಿಸಿದ್ದರು.

ಮುಂದೇನು?: ಮುಖ್ಯಮಂತ್ರಿಯವರ ಈ ಮಹತ್ವದ ಪ್ರಸ್ತಾವನೆ ಮತ್ತು ಟಿಟಿಡಿ ಸದಸ್ಯರ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ನಾಳೆ ನಡೆಯಲಿರುವ ಟಿಟಿಡಿ ಮಂಡಳಿ ಸಭೆಯು ತೀವ್ರ ಕುತೂಹಲ ಮೂಡಿಸಿದ್ದು, ಮಂಡಳಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.