ಚಂದ್ರವಳ್ಳಿ ನ್ಯೂಸ್ ನವದೆಹಲಿ: ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ತೋಖನ್ ಸಾಹು ಅವರೊಂದಿಗೆ ಪ್ರಮುಖ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ನಗರ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿ, ಸುಸ್ಥಿರ ಸಾರಿಗೆ ಸಂಪರ್ಕ (ಮೊಬಿಲಿಟಿ) ಹಾಗೂ ನಗರಗಳಲ್ಲಿ ನಾಗರಿಕ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಉಭಯ ಸಚಿವಾಲಯಗಳ ನಡುವೆ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, "ದೇಶದಾದ್ಯಂತ ನಗರಾಭಿವೃದ್ಧಿ ಯೋಜನೆಗಳನ್ನು ವೇಗವಾಗಿ ಮುನ್ನಡೆಸಲು ಮತ್ತು ನಗರವಾಸಿಗಳ ಜೀವನಮಟ್ಟವನ್ನು ಸುಧಾರಿಸಲು ವಿವಿಧ ಸಚಿವಾಲಯಗಳ ನಡುವಿನ ಪರಸ್ಪರ ಸಮನ್ವಯತೆ ಅತ್ಯಂತ ಪ್ರಮುಖವಾಗಿದೆ," ಎಂದು ತಿಳಿಸಿದ್ದಾರೆ.
ನಗರ ಪ್ರದೇಶಗಳ ಸಮಗ್ರ ಪ್ರಗತಿ ಹಾಗೂ ಜನಸಾಮಾನ್ಯರಿಗೆ ಉತ್ತಮ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ಜಂಟಿ ಪ್ರಯತ್ನಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.



