ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಪ್ರಮುಖ ಮುಖಂಡರು ಭೇಟಿ ನೀಡಿ, ಮೀಸಲಾತಿ ರಕ್ಷಣೆಗೆ ಸಂಬಂಧಿಸಿದಂತೆ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಿದರು.
ಎಸ್ಸಿ/ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿ ಹಕ್ಕುಗಳನ್ನು ರಕ್ಷಿಸುವಂತೆ ಮುಖಂಡರು ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಲ್ಲಿ ಮನವಿ ಮಾಡಿಕೊಂಡರು.
ಮುಖ್ಯ ಬೇಡಿಕೆ ಏನು?
"ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಆ್ಯಕ್ಟ್, 2022" ಅನ್ನು ಭಾರತ ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರ್ಪಡೆಗೊಳಿಸಬೇಕು.
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಪ್ರಭಾವ ಬೀರಲು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಗತ್ಯ ಶಿಫಾರಸು ಮಾಡುವಂತೆ ದೇವೇಗೌಡರಲ್ಲಿ ನಿಯೋಗವು ವಿಶೇಷವಾಗಿ ವಿನಂತಿಸಿತು.
ರಾಜ್ಯದಲ್ಲಿ ಎಸ್ಸಿ/ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಜಾರಿಗೆ ತರಲಾದ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸಲು, ಅದನ್ನು ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರಿಸುವುದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಹಿರಿಯ ನಾಯಕರಾದ ದೇವೇಗೌಡರ ಮಧ್ಯಸ್ಥಿಕೆ ಕೋರಿ ಈ ಭೇಟಿ ನಡೆದಿದೆ.
ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಅಧ್ಯಕ್ಷ ಚಂದ್ರಶೇಖರಯ್ಯ, ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಆರ್. ತುಳಸಿ ರಾಮ್, ಮುಖಂಡರಾದ ನರಸಿಂಹಯ್ಯ, ಸಣ್ಣ ನಾಯಕ್, ಜನಾರ್ಧನ್, ಜಯಶ್ರೀ ಸೇರಿದಂತೆ ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.



