ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರವು ಅತಿ ವೇಗವಾಗಿ ಬೆಳೆಯುತ್ತಿರುವ ಬೆನ್ನಲ್ಲೇ ಕಳ್ಳತನ, ದರೋಡೆ ಮತ್ತು ಪುಂಡರ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿನಿಯರ ರಕ್ಷಣೆಗಾಗಿ ನಗರದ ಎಲ್ಲಾ ವಾರ್ಡ್ಗಳು ಮತ್ತು ಮುಖ್ಯ ಸರ್ಕಲ್ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ವೇದಿಕೆ ವತಿಯಿಂದ ನಗರಸಭೆ ಮ್ಯಾನೇಜರ್ ಮಂಜುಳಾ ಅವರಿಗೆ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿನಿಯರಲ್ಲಿ ಹೆಚ್ಚಿದ ಭಯದ ವಾತಾವರಣ-
ಮನವಿ ಸಲ್ಲಿಸಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ಕೆ. ರಾಮಚಂದ್ರಪ್ಪ, "ಹಿರಿಯೂರು ನಗರದಲ್ಲಿ ಹಿಂದೆ ಪ್ರಧಾನ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ಆದರೆ ಪ್ರಸ್ತುತ ನಗರದ ಹೊರವಲಯಗಳಲ್ಲಿ ಶಾಲೆ, ಕಾಲೇಜು ಮತ್ತು ಹಾಸ್ಟೆಲ್ಗಳಿದ್ದು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ದಿನನಿತ್ಯ ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯುವ ಮುನ್ನವೇ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದರೆ, ಪೊಲೀಸ್ ಇಲಾಖೆಗೆ ನಿಗಾ ಇಡಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರಿಯಾಗುತ್ತದೆ," ಎಂದು ತಿಳಿಸಿದರು.
ದುಶ್ಚಟಗಳು ಹಾಗೂ ಪುಂಡರ ಹಾವಳಿಗೆ ಬ್ರೇಕ್ ಹಾಕಿ
ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ ಮಾತನಾಡಿ, ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಯುವಕರು ಡ್ರಗ್ಸ್, ಅಫೀಮು, ಗಾಂಜಾ, ಮದ್ಯ ಹಾಗೂ ಸೆಲ್ಯೂಷನ್ನಂತಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಮುಖ್ಯ ಸರ್ಕಲ್ಗಳಲ್ಲಿ ಗುಂಪು ಕಟ್ಟಿಕೊಂಡು ನಿಲ್ಲುವ ಪುಂಡರು ರಸ್ತೆಯಲ್ಲಿ ಓಡಾಡುವ ಯುವತಿಯರನ್ನು ಮತ್ತು ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದಾರೆ. ಕಳ್ಳತನ ಮತ್ತು ಅನುಮಾನಾಸ್ಪದ ವ್ಯಕ್ತಿಗಳ ಸಂಚಾರವೂ ಹೆಚ್ಚಾಗಿದ್ದು, ಗಲಾಟೆ-ಗಲಭೆಗಳು ಸಂಭವಿಸುವ ಮುನ್ನವೇ ನಗರಾಡಳಿತ ಎಚ್ಚೆತ್ತುಕೊಂಡು ಮುಖ್ಯ ವೃತ್ತಗಳಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ. ರಾಮಚಂದ್ರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಆರ್., ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸಾಧಿಕ್, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣ್ ರಾವ್ ಮತ್ತು ಕೆಂಚಪ್ಪ, ತಾಲೂಕು ಅಧ್ಯಕ್ಷ ಕೆ. ಓಂಕಾರ ಮೂರ್ತಿ, ಯುವ ಘಟಕದ ತಾಲೂಕು ಅಧ್ಯಕ್ಷ ಎಚ್.ಎನ್. ಅಶೋಕ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.



