ಚಂದ್ರವಳ್ಳಿ ನ್ಯೂಸ್, ಸಿಂಧನೂರು:
ವಿವಿಧ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭಗೊಂಡಿರುವ ರಾಯಚೂರಿನಿಂದ ಬಳ್ಳಾರಿವರೆಗಿನ ಪಾದಯಾತ್ರೆ ಶುಕ್ರವಾರ 4ನೇ ದಿನಕ್ಕೆ ಕಾಲಿಟ್ಟಿದೆ.
ಮೊದಲ ದಿನದ ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕರೆಲ್ಲರೂ ಒಗ್ಗಟ್ಟು ಪ್ರದರ್ಶಿಸಿದ್ದರಾದರೂ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಂಡಿನೋವಿನ ಸಮಸ್ಯೆಯಿಂದಾಗಿ ಪ್ರಸ್ತುತ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗಿಲ್ಲ. ಆದಾಗ್ಯೂ, ವಿಜಯೇಂದ್ರ ಅವರು ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕುತ್ತಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಈ ಪಾದಯಾತ್ರೆ ಅವರಿಗೆ ರಾಜಕೀಯವಾಗಿ ಹಾಗೂ ನಾಯಕತ್ವದ ದೃಷ್ಟಿಯಿಂದ ಹೊಸ ಮೆರುಗು ತಂದುಕೊಟ್ಟಿದೆ.
ಕಾಂಗ್ರೆಸ್ ಸರ್ಕಾರ ಬಡವರ ಶಾಪಕ್ಕೆ ಗುರಿಯಾಗಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ
ಸಿಂಧನೂರಿನಲ್ಲಿ 4ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
"ಕಾಂಗ್ರೆಸ್ ಸರ್ಕಾರವು ನಾಡಿನ ಬಡವರು, ಕೂಲಿ ಕಾರ್ಮಿಕರು, ರೈತರು ಹಾಗೂ ದುರ್ಬಲ ವರ್ಗದವರಿಂದ ಸಂಪೂರ್ಣವಾಗಿ ದೂರ ಸರಿದಿದೆ. ಪಂಚ ಗ್ಯಾರಂಟಿಗಳ ಭ್ರಮೆಯಲ್ಲೇ ತೇಲುತ್ತಿರುವ ಸರ್ಕಾರಕ್ಕೆ ನಾಡಿನ ಕಡುಬಡವರ ನೈಜ ಸಂಕಷ್ಟಗಳು ಕಣ್ಣಿಗೆ ಕಾಣಿಸುತ್ತಿಲ್ಲ. ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಗಳು ಕಳೆದ ಆರು ತಿಂಗಳಿಂದ ಫಲಾನುಭವಿಗಳಿಗೆ ತಲುಪಿಲ್ಲ ಎಂದು ಜನ ಅಳಲು ತೋಡಿಕೊಳ್ಳುತ್ತಿದ್ದಾರೆ" ಎಂದು ಆಕ್ರೋಶ ಹೊರಹಾಕಿದರು.
ಬಡವರ ಕಲ್ಯಾಣ ಯೋಜನೆಯಾದ 'ಗಂಗಾ ಕಲ್ಯಾಣ' ಸಮರ್ಪಕವಾಗಿ ತಲುಪುತ್ತಿಲ್ಲ ಹಾಗೂ ಮನೆ ಇಲ್ಲದ ಬಡವರಿಗೆ ವಸತಿ ಕಲ್ಪಿಸುವಲ್ಲಿಯೂ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದ ಅವರು, "ಸರ್ಕಾರ ತಕ್ಷಣವೇ ಗ್ಯಾರಂಟಿ ಭ್ರಮೆಯಿಂದ ಹೊರಬಂದು ಜನರ ವಾಸ್ತವಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು" ಎಂದು ಆಗ್ರಹಿಸಿದರು.
ಉತ್ತರ ಕರ್ನಾಟಕದಲ್ಲಿ ಸಂಘಟನೆಗೆ ಹೊಸ ಬೂಸ್ಟ್:
ಬೆಂಗಳೂರು–ಮೈಸೂರು ನಡುವಿನ ಮುಡಾ ಪಾದಯಾತ್ರೆಯ ಯಶಸ್ಸಿನ ಬಳಿಕ, ಈಗ ರಾಯಚೂರು–ಬಳ್ಳಾರಿ ಪಾದಯಾತ್ರೆಯು ವಿಜಯೇಂದ್ರ ಅವರ ನಾಯಕತ್ವಕ್ಕೆ ಮತ್ತಷ್ಟು ಬಲ ತಂದಿದೆ.
ಪಕ್ಷದ ಆಂತರಿಕ ಭಿನ್ನಮತದ ಚರ್ಚೆಗಳು ನಡೆಯುತ್ತಿದ್ದರೂ, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಸಂಘಟನೆಗೆ ಹಾಗೂ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಲು ಈ ಪಾದಯಾತ್ರೆ ಯಶಸ್ವಿಯಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.




