ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದ ಪ್ರಸಿದ್ಧ ಭೋವಿ ಗುರುಪೀಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಮುಂಬರುವ ದಿನಗಳಲ್ಲಿ ಆಯೋಜಿಸಲಾಗಿರುವ ಹೆಮ್ಮೆಯ ಜನನಾಯಕ ' ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ' ಕಾರ್ಯಕ್ರಮಕ್ಕೆ ಶ್ರೀಗಳನ್ನು ಭೇಟಿ ಮಾಡಿ ಗೌರವಪೂರ್ವಕವಾಗಿ ಆಮಂತ್ರಣ ನೀಡಿದ ವಿಜಯೇಂದ್ರ ಅವರು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಶ್ರೀಗಳ ದಿವ್ಯ ಸಾನ್ನಿಧ್ಯವನ್ನು ಕೋರಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ವಿಜಯೇಂದ್ರ ಅವರೊಂದಿಗೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದು, ಗುರುಪೀಠದಲ್ಲಿ ಶ್ರೀಗಳ ಆಶೀರ್ವಾದ ಪಡೆದರು.
ಶಾಸಕರಾದ ಹರೀಶ್ ಪೂಂಜಾ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಸ್ಥಳೀಯ ಮುಖಂಡ ಲಿಂಗಮೂರ್ತಿ, ಮುಖಂಡ ಡಾ. ಸಿದ್ದಾರ್ಥ್ ತಿಪ್ಪಾರೆಡ್ಡಿ ಮತ್ತಿತರರು ಇದ್ದರು.
ಈ ಭೇಟಿಯ ಸಮಯದಲ್ಲಿ ಪಕ್ಷದ ಸಂಘಟನೆ ಹಾಗೂ ಅಭಿಮಾನೋತ್ಸವದ ಯಶಸ್ಸಿನ ಕುರಿತು ಚರ್ಚಿಸಲಾಯಿತು. ಬಿ.ಎಸ್. ಯಡಿಯೂರಪ್ಪನವರ ಮೇಲಿರುವ ಅಪಾರ ಗೌರವ ಮತ್ತು ಅಭಿಮಾನದ ಸಂಕೇತವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಶ್ರೀಗಳ ಮಾರ್ಗದರ್ಶನ ಮತ್ತು ಸಾನ್ನಿಧ್ಯವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ವಿಜಯೇಂದ್ರ ಅವರು ತಿಳಿಸಿದರು.


