ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಆಗಿರುವ ಡಾ.ಫರ್ಹಾನ ರವರ ಬೇಜವಾಬ್ದಾರಿ ದುರ್ವರ್ತನೆ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಆರೋಗ್ಯ ಕೇಂದ್ರದ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮುಖಂಡ ಜಿ.ಲಕ್ಷ್ಮೀಪತಿ ಇಲ್ಲಿನ ವೈದ್ಯಾಧಿಕಾರಿಯಾಗಿರುವ ಡಾ.ಫರ್ಹಾನ ರೈತರನ್ನು ಕನಿಷ್ಠ ಮಟ್ಟದಲ್ಲಿ ನಡೆಸಿಕೊಳ್ಳುತ್ತಿದ್ದಾರೆ. ಗ್ರಾಮಸ್ಥರು ತಲೆನೋವು, ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗೆ ಬಂದರೆ ರೋಗಿಗಳಿಗೆ ಏಕವಚನದಲ್ಲಿ ನಿಂದಿಸಿ ಬೇಕಾಬಿಟ್ಟಿಯಾಗಿ ಚಿಕಿತ್ಸೆ ನೀಡಿ ಕಳಿಸುತ್ತಿದ್ದಾರೆ. ದಿನಕ್ಕೆ ಕನಿಷ್ಟ ೧೦ ದೂರುಗಳು ಬರುತ್ತಿವೆ. ಹೆಚ್ಚಿಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ದೂರು ನೀಡುತ್ತೇನೆ ಎಂದು ರೋಗಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಜನರೊಂದಿಗೆ ಕನಿಷ್ಟ ಸೌಜನ್ಯದಿಂದ ನಡೆದುಕೊಳ್ಳುವುದಿಲ್ಲ. ಇಂತಹ ವೈದ್ಯರು ನಮ್ಮೂರಿಗೆ ಬೇಡ. ಕೂಡಲೇ ವರ್ಗಾವಣೆ ಮಾಡಿ ನೂತನ ವೈದ್ಯರನ್ನು ನೇಮಿಸಬೇಕು. ಈ ಬಗ್ಗೆ ಪಂಚಾಯತಿಯ ಸಾಮಾನ್ಯ ಸಭೆಯಲ್ಲೂ ರೆಸ್ಯೂಲೆಷನ್ ಮಾಡಲಾಗಿದೆ. ಒಂದು ವಾರದಲ್ಲಿ ಕ್ರಮ ತೆಗೆದುಕೊಳ್ಳದಿದ್ದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ವೈದ್ಯಾಧಿಕಾರಿಗಳಿಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ದೌಡಾಯಿಸಿದ ತಾಲ್ಲೂಕು ವೈದ್ಯಾಧಿಕಾರಿ ಡಾ.ಶಾರದ ಗ್ರಾಮಸ್ಥರ ಸಮಸ್ಯೆ ಆಲಿಸಿದರು. ಬಳಿಕ ಮಾತನಾಡಿ ಹಿಂದೆಯೂ ಇಂತಹ ದೂರುಗಳು ಬಂದಿದ್ದವು. ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಇಂತಹ ಘಟನೆಗಳು ಪುನರಾವರ್ತನೆ ಆಗುತ್ತಿರುವುದು ಸರಿಯಲ್ಲ. ಗ್ರಾಮಸ್ಥರ ಮನವಿಯನ್ನು ಜಿಲ್ಲಾ ವೈದ್ಯಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದರು.
ಪಿಡಿಓ ಕಾಂತರಾಜು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಜ್ಯೋತಿ, ಚಾಂದಿನಿ, ಗ್ರಾಮಸ್ಥರಾದ ಆನಂದ್, ರಮೇಶ್ ಸೇರಿದಂತೆ ಗ್ರಾಮಸ್ಥರು ಪ್ರತಿಭಟನೆ ವೇಳೆ ಹಾಜರಿದ್ದರು.



