ಚಂದ್ರವಳ್ಳಿ ನ್ಯೂಸ್, ಕುಣಿಗಲ್:
ತಾಲ್ಲೂಕಿನ ಕುಣಿಗಲ್ ಟೌನ್ನ 19ನೇ ವಾರ್ಡ್ನಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಕರ್ತವ್ಯಲೋಪ ಎಸಗುತ್ತಿದ್ದಾರೆ ಎಂದು ಜನತಾದಳ (ಜಾತ್ಯತೀತ) ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕ್ಷೇತ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಚುನಾವಣಾ ಅಕ್ರಮ ಎಸಗಲು ವ್ಯವಸ್ಥಿತವಾಗಿ 'ಕೈ' ಜೋಡಿಸಿದೆ ಎಂದು ಜೆಡಿಎಸ್ ಗಂಭೀರವಾಗಿ ಆರೋಪಿಸಿದೆ.
ನಿಯಮಗಳ ಪ್ರಕಾರ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ಹಾಗೂ ಗಣತಿ ಕಾರ್ಯ ನಡೆಸಬೇಕು. ಆದರೆ, ಇಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳುವ ಬದಲು, ಒಂದೇ ಕಡೆ ಕುಳಿತು ಮತದಾರರ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ.
ಇದು ಮುಂಬರುವ ಚುನಾವಣೆಗಳಲ್ಲಿ ವ್ಯವಸ್ಥಿತವಾಗಿ ಅಕ್ರಮ ಎಸಗಲು ಮಾಡಿಕೊಳ್ಳುತ್ತಿರುವ ಮುನ್ಸೂಚನೆಯಾಗಿದೆ ಎಂದು ಜೆಡಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ:
ರಾಜ್ಯದ ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಅಧಿಕಾರಿಗಳು ಇಂತಹ ನಿಯಮಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗೆ ಕರ್ತವ್ಯಲೋಪ ಎಸಗುತ್ತಿರುವ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಹಾಗೂ ಚುನಾವಣಾ ಆಯೋಗ ಕೂಡಲೇ ಎಚ್ಚೆತ್ತುಕೊಂಡು, ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಕ್ಷ ಆಗ್ರಹಿಸಿದೆ.
ಜೆಡಿಎಸ್ ಎಚ್ಚರಿಕೆ:
"ನಿಯಮ ಉಲ್ಲಂಘಿಸಿ ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸದಿದ್ದರೆ, ಜೆಡಿಎಸ್ ಪಕ್ಷದ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಹಾಗೂ ಈ ಅಕ್ರಮದ ವಿರುದ್ಧ ಬೀದಿಗಿಳಿದು ಪ್ರತಿಭಟಿಸಲಾಗುವುದು."
ಕ್ಷೇತ್ರದಲ್ಲಿ ಪಾರದರ್ಶಕವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಬೇಕು ಮತ್ತು ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು ಎಂದು ಜೆಡಿಎಸ್ ಪ್ರಮುಖರು ಒತ್ತಾಯಿಸಿದ್ದಾರೆ.



