ಚಂದ್ರವಳ್ಳಿ ನ್ಯೂಸ್, ರಾಮನಗರ:
ಬಿಡದಿ ಟೌನ್ಶಿಪ್ಯೋಜನೆಗಾಗಿ ರಾಮನಗರ ತಾಲ್ಲೂಕಿನ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮಗಳಲ್ಲಿ ಸುಮಾರು 500 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿರುವುದನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಬಿಡದಿಯ ಅರಳಾಳುಸಂದ್ರದಲ್ಲಿ ಇಂದು ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಈ ಕ್ರಮವನ್ನು "ರೈತವಿರೋಧಿ ನೀತಿ" ಎಂದು ಕರೆದರಲ್ಲದೆ, ಭೂಮಿ ಕಳೆದುಕೊಳ್ಳಲಿರುವ ರೈತರ ಪರವಾಗಿ ಹಮ್ಮಿಕೊಳ್ಳಲಾಗಿರುವ ಮುಂದಿನ ಹೋರಾಟದ ರೂಪರೇಷೆಗಳನ್ನು ಪ್ರಕಟಿಸಿದರು.
"ಸರ್ಕಾರ ಯಾರ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ?":
ಸುದ್ದಿಗೋಷ್ಠಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ ಖಜಾನೆ ಖಾಲಿಯಾಗಿದ್ದು ಸಾಲದ ಹೊರೆ ಹೆಚ್ಚಾಗಿದೆ. ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲದಿದ್ದರೂ, ಆರ್ಥಿಕ ಇಲಾಖೆಯ ವರದಿಯನ್ನು ಸಂಪೂರ್ಣವಾಗಿ ಗಾಳಿಗೆ ತೂರಿ, ಬರೋಬ್ಬರಿ ಶೇಕಡಾ 87 ರಷ್ಟು ಸಾಲ ಪಡೆದು ಈ ಯೋಜನೆ ಮಾಡಲು ಹೊರಟಿದೆ. ಸರ್ಕಾರ ಈ ಹಠಕ್ಕೆ ಬಿದ್ದಿರುವುದು ಯಾರ ಹಿತಾಸಕ್ತಿಗಾಗಿ? ಎಂದು ಅವರು ಪ್ರಶ್ನಿಸಿದರು.
ರೈತರ ಬದುಕು ಬೀದಿಗೆ: ಹೈನುಗಾರಿಕೆ, ರೇಷ್ಮೆ ಮತ್ತು ಕೃಷಿಯನ್ನೇ ನಂಬಿ ಬದುಕುತ್ತಿರುವ ಈ ಭಾಗದ ರೈತರನ್ನು ಬೀದಿಗೆ ತಳ್ಳಲು ಸರ್ಕಾರ ಹೊರಟಿದೆ. ರೈತರ ಹಿತ ಕಾಯುವವರೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ನಿಖಿಲ್ ಗುಡುಗಿದರು.
ಜೂನ್ 21 ರಂದು ಬೃಹತ್ ಪಾದಯಾತ್ರೆಗೆ ಕರೆ:
ಬಿಡದಿ ಟೌನ್ಶಿಪ್ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಒತ್ತಾಯಿಸಿದ ನಿಖಿಲ್ ಕುಮಾರಸ್ವಾಮಿ, ಬರುವ ಜೂನ್ 21 ರಂದು ಟೌನ್ಶಿಪ್ ವ್ಯಾಪ್ತಿಯ 26 ಹಳ್ಳಿಗಳ ರೈತರನ್ನು ಒಗ್ಗೂಡಿಸಿ ಬೃಹತ್ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಿಸಿದರು. ಈ ಹೋರಾಟವನ್ನು ಯಶಸ್ವಿಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂಧವರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ನಿಕಟಪೂರ್ವ ಶಾಸಕರಾದ ಎ. ಮಂಜುನಾಥ್, ಜಿಲ್ಲಾಧ್ಯಕ್ಷ ಜಯಮುತ್ತು, ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ ಸೇರಿದಂತೆ ನೂರಾರು ರೈತ ಮುಖಂಡರು ಹಾಗೂ ಬಂಧುಗಳು ಉಪಸ್ಥಿತರಿದ್ದು, ಹೋರಾಟಕ್ಕೆ ಬೆಂಬಲ ಸೂಚಿಸಿದರು.



