ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜಕೀಯ ಜೀವನಕ್ಕೆ ಕಾಲಿಟ್ಟು ಐವತ್ತು ವರ್ಷಗಳನ್ನು ಪೂರೈಸಿರುವ ರೈತ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮೇ. ೯ ರಂದು ಮಾದಾರ ಚನ್ನಯ್ಯ ಗುರುಪೀಠದ ಬಳಿ ವಿಶಾಲವಾದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಅಭಿಮಾನೋತ್ಸವಕ್ಕೆ ನಾಯಕ ಸಮಾಜದ ಮುಖಂಡರುಗಳನ್ನು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಆಹ್ವಾನಿಸಿದರು.
ಪ್ರವಾಸಿ ಮಂದಿರದಲ್ಲಿ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮತ್ತಿತರರಿಗೆ ಆಹ್ವಾನ ಪತ್ರಿಕೆ ನೀಡಿ ಮಾತನಾಡಿದ ಜಿ.ಹೆಚ್.ತಿಪ್ಪಾರೆಡ್ಡಿರವರು ಮೇ.೮ ರಂದು ಸಂಜೆ ಕನಕ ವೃತ್ತದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಅದ್ದೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದು. ೨೫ ಕ್ಕೂ ಹೆಚ್ಚು ಕಲಾ ತಂಡಗಳು ಪಾಲ್ಗೊಳ್ಳಲಿವೆ. ಐದು ನೂರಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ ಹೊತ್ತು ಸ್ವಾಗತಿಸುವರು. ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತಿಂಡಿ, ಊಟದ ವ್ಯವಸ್ಥೆ ಮಾಡಲಾಗುವುದು. ನಾಯಕ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ ಕುಮಾರಸ್ವಾಮಿ ಮಾತನಾಡಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಘೋಷಿಸಿದರು. ಅದರಿಂದ ನಾಯಕ ಸಮಾಜ ಸಂಘಟನೆಯಾಗಲು ಅವಕಾಶ ಸಿಕ್ಕಂತಾಯಿತು.
ಎಸ್ಸಿಪಿ. ಟಿಎಸ್ಪಿ ಯೋಜನೆಗೆ ಹೆಚ್ಚಿನ ಅನುದಾನ ಮಂಜೂರು ಮಾಡಿದರು. ಮದಕರಿನಾಯಕ ಆಳಿದ ನಾಡು ಚಿತ್ರದುರ್ಗದಲ್ಲಿ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ಅಮಿತ್ಶಾ ಚಿತ್ರದುರ್ಗಕ್ಕೆ ಬಂದಾಗ ಭರವಸೆ ನೀಡಿ ಹೋಗಿದ್ದರು. ಇದುವರೆವಿಗೂ ಆಗಿಲ್ಲ. ಮೇ.೯ ರ ಅಭಿಮಾನೋತ್ಸವಕ್ಕೆ ಆಗಮಿಸುತ್ತಿರುವುದರಿಂದ ಮತ್ತೊಮ್ಮೆ ಥೀಂ ಪಾರ್ಕ್ ನಿರ್ಮಾಣಕ್ಕೆ ಮನವಿ ಅರ್ಪಿಸಲಾಗುವುದು. ವಾಲ್ಮೀಕಿ ಸಮಾಜದವರು ದೊಡ್ಡ ಸಂಖ್ಯೆಯಲ್ಲಿ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದಲ್ಲಿ ಭಾಗವಹಿಸುವಂತೆ ವಿನಂತಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಿದ್ದಾರ್ಥ ಗುಂಡಾರ್ಪಿ ಮಾತನಾಡಿ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದಲ್ಲಿ ರಾಜ್ಯದ ನಾನಾ ಭಾಗಗಳಿಂದ ಲಕ್ಷೆಪ ಲಕ್ಷ ಸಂಖ್ಯೆಯಲ್ಲಿ ಆಗಮಿಸುವ ಅಭಿಮಾನಿಗಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ತಿಂಡಿ, ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಬಿಸಿಲ ತಾಪ ತಾಕದಂತೆ ಜರ್ಮನ್ ಟೆಂಟ್, ಕೂಲರ್ಗಳ ವ್ಯವಸ್ಥೆಯಿರುತ್ತದೆ. ನಾಯಕ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದರು.
ನಗರಸಭೆ ಮಾಜಿ ಸದಸ್ಯ ವೆಂಕಟೇಶ್, ಬಾಲೇನಹಳ್ಳಿ ತಿಪ್ಪೇಸ್ವಾಮಿ, ಕವನ, ಯುವ ನ್ಯಾಯವಾದಿ ಅಶೋಕ್ಬೆಳಗಟ್ಟ, ಪ್ರಶಾಂತ್ ಕೂಲಿಕಾರ್, ಓಬಳೇಶ್, ಸೋಮೇಂದ್ರ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


