ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಷ್ಯಾದ ಗೌರವಾನ್ವಿತ ಅಧ್ಯಕ್ಷರಾದ ವ್ಲಾದಿಮಿರ್ ಪುಟಿನ್ ಅವರಿಗೆ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥ ಭಗವದ್ಗೀತೆ ಯನ್ನು ಉಡುಗೊರೆಯಾಗಿ ನೀಡಿರುವುದು ಅತ್ಯಂತ ಶ್ಲಾಘನೀಯ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಭಾರತದ ಶ್ರೇಷ್ಠ ಪರಂಪರೆ ಮತ್ತು ನಮ್ಮ ಪುರಾಣದ ಹೆಗ್ಗುರುತುಗಳನ್ನು ಮತ್ತಷ್ಟು ಎತ್ತರಕ್ಕೇರಿಸಿ ಸಾರ್ವಕಾಲಿಕಗೊಳಿಸುವ ನಿಟ್ಟಿನಲ್ಲಿ ಪ್ರಧಾನಿಗಳ ದೃಷ್ಟಿಕೋನವು ನಮಗೆಲ್ಲರಿಗೂ ಅನುಕರಣೀಯ.
ಮನುಕುಲದ ದಾರಿದೀಪ, ಅರಿವಿನ ಬೆಳಕಾಗಿರುವ ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ, ಶಿಕ್ಷಣದ ಪ್ರತೀ ಹಂತದಲ್ಲಿಯೂ ಪಠ್ಯವಾಗಬೇಕು ಎಂಬುದು ನನ್ನ ಆಶಯ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಅಗತ್ಯ ಕ್ರಮ ವಹಿಸುವ ಬಗ್ಗೆ ನಾನು ಕೇಂದ್ರದ ಶಿಕ್ಷಣ ಮಂತ್ರಿಗಳಾದ ಪ್ರಧಾನ್ ಅವರಿಗೆ ಪತ್ರ ಬರೆದು ವಿನಂತಿಸಿದ್ದೇನೆ. ಹಾಗೆಯೇ ನಮ್ಮ ನೆಲದ ಅನರ್ಘ್ಯ ಸಂಪತ್ತು ಶ್ರೀ ವಾಲ್ಮೀಕಿ ವಿರಚಿತ ರಾಮಾಯಣ ಮತ್ತು ಶ್ರೀ ವ್ಯಾಸ ವಿರಚಿತ ಮಹಾಭಾರತ ಮಹಾಕಾವ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡುವುದು ಅಗತ್ಯ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

