ಕೈದಿಗಳಿಗೆ ರಾಜಾತಿಥ್ಯ ಅಧಿಕಾರಿಗಳ ತಲೆದಂಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಇತ್ತೀಚೆಗೆ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸಂಬಂಧ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದರೆ, ಜೈಲಿನ ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತು ಮಾಡಲಾಗಿದೆ.
ಜೊತೆಗೆ ಸಮಗ್ರ ತನಿಖೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಆದೇಶ ಮಾಡಿದ್ದಾರೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿ​, ಕೈದಿಗಳಿಗೆ ನೀಡುತ್ತಿರುವ ರಾಜ್ಯಾತಿಥ್ಯ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದೇವೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

- Advertisement - 

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ 5,000 ಕೈದಿಗಳಿದ್ದು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳು ಒಟ್ಟಿಗೆ ಇರುತ್ತಾರೆ. ಹೀಗಾಗಿ ಜೈಲುಗಳ ಮೇಲೆ ನಿಗಾವಹಿಸಲು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, 15 ದಿನದೊಳಗೆ ಇದು ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದರು.

ಜೈಲಿನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಪ್ರತಿ 5 ವರ್ಷಗಳ ನಂತರ ಜೈಲಿನ ಅಧಿಕಾರಿಗಳ ವರ್ಗಾವಣೆ ಕಡ್ಡಾಯವಾಗಲಿದ್ದು, ದೀರ್ಘಕಾಲ ಒಂದೇ ಕಡೆ ಕೆಲಸ ಮಾಡಿದರೆ ಬೇರು ಬಿಡುತ್ತಾರೆ. ಅವರು ಪ್ರಭಾವ ಬೀರುವ ಸಾಧ್ಯತೆ ಹಿನ್ನಲೆ ಅಂತವರನ್ನು ಬೇರೆಡೆಗೆ ವರ್ಗಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

- Advertisement - 

ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದ್ದು, ಕೆಪಿಎಸ್​ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು. ಸಹಾಯಕ ಅಧೀಕ್ಷಕರು ಸೇರಿದಂತೆ 1,000 ಸಿಬ್ಬಂದಿ ನೇಮಕ ಮಾಡಲು ಉದ್ದೇಶಿಸಲಾಗಿದ್ದು, ಸಿಬ್ಬಂದಿ ಕೊರತೆ ನೀಗಿಸಿದರೆ ಎಲ್ಲವನ್ನು ಸಮರ್ಪಕವಾಗಿ ನಿರ್ವಹಿಸಬಹುದು ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆದಿರುವ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವರದಿ ಗಮನಿಸಿದ್ದು ಆ ಪೈಕಿ ಮುಖ್ಯವಾದ ಕೆಲವು ವಿಡಿಯೋಗಳು 2023ರಲ್ಲಿ ಆಗಿರುವುದು. ಒಂದೆರಡು ವಿಡಿಯೋಗಳು ಮಾತ್ರ 3-4 ತಿಂಗಳ ಹಿಂದೆ ಆಗಿದ್ದು. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್​ ಮಾಹಿತಿ ನೀಡಿದ್ದಾರೆ.

 

Share This Article
error: Content is protected !!
";