ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗಖಾತ್ರಿ (ನರೇಗಾ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಯಾವುದೇ ನಿಬರ್ಂಧ ಇರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಚಿಕ್ಕಮಗಳೂರು ಶಾಸಕ ಹೆಚ್.ಡಿ. ತಮ್ಮಯ್ಯ ಅವರು, ನರೇಗಾ ಯೋಜನೆಯಡಿ ಕ್ರಿಯಾ ಯೋಜನೆಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅವಕಾಶವಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಕುರಿತಂತೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕೋಎಇದಾಗ ಸಚಿವರು,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸಿ, ನರೇಗಾ ಯೋಜನೆಯಡಿ ಅನುಮತಿಸಿದ ಕಾಮಗಾರಿಗಳಲ್ಲಿ ಸಮುದಾಯ ಆಧಾರಿತ ಉದ್ದೇಶಕ್ಕಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ನಿಬರ್ಂಧ ವಿಧಿಸಿಲ್ಲ.
ಈ ರೀತಿಯ ಕಾಮಗಾರಿಗಳನ್ನು ನಿಯಮಾನುಸಾರ ಗ್ರಾಮ ಪಂಚಾಯತಿಯ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಂಡು ಅನುಷ್ಠಾನಗೊಳಿಸಬಹುದಾಗಿದೆ. ಒಂದು ವೇಳೆ ಸ್ಥಳೀಯ ಅಧಿಕಾರಿಗಳು ಆ ರೀತಿ ತಪ್ಪು ಮಾಹಿತಿ ನೀಡಿದ್ದರೆ, ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು.
ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ, ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಸಲ್ಲಿಸಲಾಗಿದೆ. ಅದೇ ರೀತಿ 15 ನೇ ಹಣಕಾಸು ಆಯೋಗದಲ್ಲಿಯೂ ರಾಜ್ಯಕ್ಕೆ ಸುಮಾರು 2,500 ಕೋಟಿ ರೂ. ಅನುದಾನ ಬರಬೇಕಿದೆ,
ಈ ಕುರಿತೂ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಅನುದಾನ ಬಂದ ಬಳಿಕ ಗ್ರಾಮ ಪಂಚಾಯತಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

