ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಜಗದೇವ್ ಗುತ್ತೇದಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಒಳ ಮೀಸಲಾತಿ ಪ್ರಕ್ರಿಯೆ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್ಐ ಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು, ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ.
ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ಕಾಳಗಿ ತಾಲೂಕಿನಲ್ಲಿ ಸಿಪಿಐ ಕಚೇರಿ ಕಟ್ಟಡ ಮತ್ತು ಸಿಪಿಐ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಇದೆ ವೇಳೆ ಸದಸ್ಯರ ಪ್ರಶ್ನೆಗೆ ಮಾಹಿತಿ ನೀಡಿದರು.

