ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನಸಂಖ್ಯೆ ಮಾನದಂಡವೊಂದರ ಆಧಾರದಲ್ಲಿ ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ಮಾಡುವುದಾದರೆ, 1971ರ ಜನಗಣತಿ ಆಧಾರದಲ್ಲಿ ಮಾಡಬೇಕು.
ಒಕ್ಕೂಟ ವ್ಯವಸ್ಥೆಗೆ ಮಾರಕವಾದ ಕೇಂದ್ರದ ನಡೆಯನ್ನು ಕರ್ನಾಟಕ, ತಮಿಳುನಾಡು, ಕೇರಳ ಒಳಗೊಂಡು ಪ್ರಗತಿಪರ ರಾಜ್ಯಗಳು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.
ಈ ಬಗ್ಗೆ ಶಾಸನಸಭೆಗಳು, ನ್ಯಾಯಾಲಯ ಹಾಗೂ ಜನರ ಮಧ್ಯೆ ಬೀದಿಯಲ್ಲೂ ಹೋರಾಟ ಮಾಡುತ್ತೇವೆ. ಕೇವಲ ಜನಸಂಖ್ಯೆ ಮಾತ್ರವಲ್ಲದೇ, ಮಾನವ ಅಭಿವೃದ್ಧಿ, ತೆರಿಗೆ ಕೊಡುಗೆ, ಆಡಳಿತ, ಜನಸಂಖ್ಯೆ ನಿಯಂತ್ರಣದ ಸೂಚ್ಯಂಕಗಳ ಮಾನದಂಡಗಳ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಆಗಬೇಕು ಎಂದು ಅವರು ಆಗ್ರಹ ಮಾಡಿದ್ದಾರೆ.
ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡುವುದಾದರೆ, 1971ರ ಜನಗಣತಿ ಆಧಾರದ ಮೇಲೆ ಮರುವಿಂಗಡಣೆ ಮಾಡಬೇಕು. ಕೇವಲ ಜನಸಂಖ್ಯೆಯನ್ನು ಮಾನದಂಡವಾಗಿಟ್ಟುಕೊಂಡು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲಾಗುತ್ತಿದೆ.
ಇದು ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆಹಲವು ರಾಜ್ಯಗಳ ಮೇಲೆ ಕೇಂದ್ರ ನಡೆಸುತ್ತಿರುವ ರಾಜಕೀಯ ಹುನ್ನಾರ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಜನಸಂಖ್ಯೆ ನಿಯಂತ್ರಣ, ಅಕ್ಷರಸ್ಥರ ಸಂಖ್ಯೆ ಏರಿಕೆ ಹಾಗೂ ಮಹಿಳೆಯರ ಸಬಲೀಕರಣದಲ್ಲಿ ಯಶಸ್ಸು ಸಾಧಿಸಿರುವ ರಾಜ್ಯಗಳನ್ನು ಕುಗ್ಗಿಸುವ ಪ್ರಯತ್ನ ಇದಾಗಿದೆ ಎಂದು ಡಿಸಿಎಂ ಕಿಡಿಕಾರಿದ್ದಾರೆ.