ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಿಸಲಾಗುತ್ತಿದ್ದು ಆಗಸ್ಟ್-31 ರಿಂದ ಜಾರಿಗೆ ಬರುವಂತೆ ಶೇ.1 ರಿಂದ 2ರಷ್ಟು ಶುಲ್ಕ ಹೆಚ್ಚಳ ಮಾಡಿ ಆದೇಶಿಸಲಾಗಿದೆ.
ಈ ಕುರಿತು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಮಾಹಿತಿ ನೀಡಿ ರಾಜ್ಯ ಸರ್ಕಾರವು ಆಗಸ್ಟ್– 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆ ಹೊರೆಯ ರಾಜ್ಯಗಳಲ್ಲಿರುವುದಕ್ಕಿಂತ ಕಡಿಮೆ ಇದೆ. ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ಶುಲ್ಕ ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡಿನಲ್ಲಿ ಶೇ.9, ಕೇರಳದಲ್ಲಿ ಶೇ.10, ಆಂಧ್ರಪ್ರದೇಶದಲ್ಲಿ ಶೇ. 7.5, ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕವಿದೆ.
ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ. 1 ರಿಂದ ಶೇ.2 ರಷ್ಟು ಪರಿಷ್ಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ದಿನಾಂಕ ನಿಗದಿ ಮಾಡಿಸಿಕೊಂಡಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿ ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್ಎಂಎಸ್ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.
ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇ.2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

