ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಲಹಂಕ ವಿಧಾನಸಭಾ ಕ್ಷೇತ್ರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಖುದ್ದು ಪರಿಶೀಲಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ರಸ್ತೆಗುಂಡಿಗಳನ್ನು ಕೂಡಲೇ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದರು. ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಸುಲಭವಾಗಿ ಮಾಹಿತಿ ನೀಡಲು, ‘ಗುಂಡಿ ಗಮನ‘ ಎಂಬ ಮೊಬೈಲ್ ಆ್ಯಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿದರೆ, ನಾವು ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುತ್ತೇವೆ ಎಂದು ಶಿವಕುಮಾರ್ ಹೇಳಿದರು.
ಬ್ರ್ಯಾಂಡ್ ಬೆಂಗಳೂರು:
ನಮ್ಮ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಬದ್ಧತೆ ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ನಮ್ಮ ಸರ್ಕಾರ ನಗರದ ಸಮಗ್ರ ಅಭಿವೃದ್ಧಿ ಮತ್ತು ದೀರ್ಘಾವಧಿಯ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿ ಸ್ಪಷ್ಟ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಡಿಸಿಎಂ ತಿಳಿಸಿದರು.
ರಸ್ತೆ ಗುಂಡಿಗಳನ್ನು ಮುಚ್ಚುವುದರಿಂದ ಹಿಡಿದು, ಪಾರದರ್ಶಕ ಇ-ಖಾತೆ ವ್ಯವಸ್ಥೆ ಜಾರಿಗೊಳಿಸುವುದು, ಟನಲ್ಮಾರ್ಗಗಳ ನಿರ್ಮಾಣ ಹಾಗೂ ನಗರದಾದ್ಯಂತ ಕಾವೇರಿ ನೀರು ಪೂರೈಸುವುದು, ಇವೆಲ್ಲವೂ ಈ ಬದ್ಧತೆಯ ಭಾಗವಾಗಿವೆ. ಪ್ರತಿಯೊಂದು ಹೆಜ್ಜೆಯೂ ನಮ್ಮ ಬೆಂಗಳೂರಿನ ಭವಿಷ್ಯವನ್ನು ಬಲಪಡಿಸಲು ಮತ್ತು ಸುಸ್ಥಿರ ನಗರವನ್ನಾಗಿ ನಿರ್ಮಿಸಲು ನಾವು ಡುತ್ತಿರುವ ಪ್ರಯತ್ನವಾಗಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

