ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೆಳಗಿನ ಜೂಗಾನಹಳ್ಳಿ ಹಾಗೂ ಗುಂಜೂರು ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿ ವರ್ಷದೊಳಗೆ ಪೂರ್ಣಗೊಂಡು ಗ್ರಾಮಸ್ಥರ ಓಡಾಟಕ್ಕೆ ಅನುಕೂಲವಾಗಲಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಕೆಳಗಿನ ಜೂಗಾನಹಳ್ಳಿ ಮತ್ತು ಗುಂಜೂರು ಗ್ರಾಮದ ಮಧ್ಯೆ ರಸ್ತೆ ಸಂಪರ್ಕಿಸಲು ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಕೆಳಗಿನ ಜೂಗಾನಹಳ್ಳಿ-ಗುಂಜೂರು ಗ್ರಾಮಸ್ಥರ ಬಹು ದಿನಗಳ ಬೇಡಿಕೆ ಈಡೇರುತ್ತಿದ್ದು, 5 ಕೋಟಿ ರೂ. ವೆಚ್ಚದಲ್ಲಿ 60 ಮೀಟರ್ ಉದ್ದದ ಸೇತುವೆ ನಿರ್ಮಾಣದಿಂದ ಜನರು 7 ಕಿ.ಮೀ ದೂರ ಕ್ರಮಿಸುವುದು ಕಡಿಮೆ ಮಾಡುತ್ತದೆ. ಜತೆಗೆ ಎರಡು ಗ್ರಾಮದ ರೈತರು ಹಾಗೂ ಜನರು ವ್ಯಾಪಾರ ವಹಿವಾಟುಗಳ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ರಾಜಣ್ಣ, ಘಾಟಿ ಪ್ರಾಧಿಕಾರದ ಅಧ್ಯಕ್ಷ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಗ್ರಾ.ಪಂ ಅಧ್ಯಕ್ಷೆ ಉಮಾಬಾಯಿ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ ಎನ್.ಎಸ್, ಸಹಾಯಕ ಅಭಿಯಂತರ ವಿಕಾಸ. ಎನ್ ಸೇರಿ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

