ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದೂಗಳ ದೇವಸ್ಥಾನ, ಹಬ್ಬ, ಆಚರಣೆಗಳಿಗೆ ಅಡಚಣೆ ಉಂಟು ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅದೆಂತಹ ವಿಕೃತ ಸಂತೋಷ ಸಿಗುತ್ತೋ ಗೊತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ.
ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ, ನಮ್ಮ ಸಂಸ್ಕೃತಿಯ ಪ್ರತೀಕವಾದ ಹರಿಷಿಣ, ಕುಂಕುಮದ ಮೇಲೆ ನಂಬಿಕೆ ಇಲ್ಲದ ಅನ್ಯಧರ್ಮೀಯರಿಂದ ದಸರಾ ಉದ್ಘಾಟನೆ ಮಾಡಿಸುವ ಹಠ ಸಾಧಿಸಿದ್ದಾಯಿತು. ದುಬಾರಿ ಪಾಸ್ ನೆಪದಲ್ಲಿ ಜನಸಾಮಾನ್ಯರಿಗೆ ದಸರಾ ವೀಕ್ಷಣೆ ಕಷ್ಟಸಾಧ್ಯ ಮಾಡಿದ್ದಾಯ್ತು.
ಈಗ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ.
ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

