ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೈಕ್ಷಣಿಕ 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಮಾ.18 ರಿಂದ ಎ.2ರವರೆಗೆ ನಡೆಯಲಿದೆ. ಪರೀಕ್ಷೆಯನ್ನ ಸೂಸೂತ್ರ ಹಾಗೂ ಪಾರದರ್ಶಕವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿದ್ಧತೆ ನಡೆಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,65,988 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮಾ.18ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ. ಸುಗಮವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ), ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪೊಲೀಸರೊಂದಿಗೆ ಸಭೆ ನಡೆಸಿ ಅಂತಿಮ ತಯಾರಿ ಪೂರ್ಣಗೊಳಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಇರಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಹಿತಿ ಹಬ್ಬಿಸಿ ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗಿದೆ.

- Advertisement - 

ಬಸ್ ಪ್ರಯಾಣ ಉಚಿತ:
ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಬಸ್​ಗಳಲ್ಲಿ ಪ್ರಯಾಣಿಸಬಹುದಾಗಿದೆ. ಉತ್ತಮ ಫಲಿತಾಂಶ ವೃದ್ಧಿಗಾಗಿ ಕಾರ್ಯಾಗಾರ ನಡೆಸಲಾಗಿದ್ದು
, ಈ ಮೂಲಕ ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಿ ಧೈರ್ಯದಿಂದ ಪರೀಕ್ಷೆ ಎದುರಿಸುವಂತೆ ಇಲಾಖೆಯು ಮಾನಸಿಕ ಸಜ್ಜುಗೊಳಿಸಿದೆ.

ಎಸ್​ಎಸ್​ಎಲ್​ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಸಭಾಪತಿಗಳು ಒಕ್ಕೊರಲಿನಿಂದ ಶುಭ ಹಾರೈಸಿದರು.

- Advertisement - 

ಪರೀಕ್ಷೆಯಲ್ಲಿ ಫೇಲಾದರೆ ಎಂಬ ಆತಂಕ ಬೇಡ: “ನಾಳೆಯಿಂದ ಆರಂಭವಾಗುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಒಟ್ಟು 8,65,988 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಹಾಗೂ ವೈಯಕ್ತಿಕವಾಗಿ ಶುಭ ಹಾರೈಸುತ್ತೇನೆ. ವಿದ್ಯಾರ್ಥಿಗಳು ಯಾವುದೇ ಆತಂಕ, ಭಯವಿಲ್ಲದೆ ಪರೀಕ್ಷೆ ಎದುರಿಸಬೇಕು. ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳ (ಪರೀಕ್ಷೆ 1, 2, 3) ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದರೆ ಅಥವಾ ಅನುತ್ತೀರ್ಣರಾದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಇರುವುದರಿಂದ ಯಾರೂ ಧೃತಿಗೆಡಬಾರದು ಹಾಗೂ ಆತಂಕಪಡುವ ಅಗತ್ಯವಿಲ್ಲ” ಎಂದು ವಿದ್ಯಾರ್ಥಿಗಳಿಗೆ ಸಿಎಂ ಧೈರ್ಯ ತುಂಬಿದ್ದಾರೆ.

ಉಭಯ ಸದನಗಳಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ದ್ವಿತೀಯ ಪಿಯುಸಿ ಪರೀಕ್ಷೆಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿವೆ. ನಾಳೆಯಿಂದ ಏಪ್ರಿಲ್ 2ರವರೆಗೆ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಮಕ್ಕಳಿಗೆ ಪರೀಕ್ಷೆಯ ಭಯ ನಿವಾರಿಸಲು ನಮ್ಮ ಸರ್ಕಾರ ವರ್ಷದಲ್ಲಿ 3 ಪರೀಕ್ಷೆಗಳ ಅವಕಾಶ (Exam 1, 2 ಹಾಗೂ 3) ನೀಡಿದೆ. ಬಡ ವಿದ್ಯಾರ್ಥಿಗಳಿಗೆ ಹೊರೆಯಾಗದಿರಲಿ ಹಾಗೂ ಪೋಷಕರ ಬಳಿ ಮತ್ತೆ ಹಣ ಕೇಳಲು ಹಿಂಜರಿಕೆಯಾಗದಿರಲಿ ಎಂಬ ಸದುದ್ದೇಶದಿಂದ, ಅನುತ್ತೀರ್ಣರಾದವರಿಗೆ ಮರುಪರೀಕ್ಷೆ ಬರೆಯಲು ಇದ್ದ ಶುಲ್ಕವನ್ನು ನಮ್ಮ ಸರ್ಕಾರ ರದ್ದುಪಡಿಸಿದೆ ಎಂದರು.

ಅಲ್ಲದೆ, ಖಾಸಗಿ ಶಾಲೆಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳಲ್ಲೂ ಯಶಸ್ವಿಯಾಗಿ ಪೋಷಕರು-ಶಿಕ್ಷಕರ ಸಭೆ ನಡೆಸಲಾಗಿದೆ. ಪರೀಕ್ಷಾ ಪ್ರಕ್ರಿಯೆಗೆ ಸಹಕರಿಸುತ್ತಿರುವ ಗೃಹ ಇಲಾಖೆ, ಶಿಕ್ಷಕರು ಹಾಗೂ ಪೋಷಕರಿಗೆ ಧನ್ಯವಾದಗಳು. ಪರೀಕ್ಷೆ ಬರೆಯುವ ಎಲ್ಲರಿಗೂ ಈ ಸದನದ ಮೂಲಕ ಒಳಿತಾಗಲಿ ಎಂದು ಆಶಿಸುತ್ತೇನೆ ಎಂದರು.

ಎಸ್‌ಎಸ್‌ಎಲ್‌ಸಿ ಎಂಬುದು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ. ಪೋಷಕರು ಕೊನೆಯ ಕ್ಷಣದಲ್ಲಿ ಮಕ್ಕಳ ಮೇಲೆ ಅನಗತ್ಯವಾಗಿ ಅಂಕಗಳಿಗಾಗಿ ಒತ್ತಡ ಹೇರಿ ಅವರಿಗೆ ಮಾನಸಿಕ ಹಿಂಸೆ ನೀಡಬಾರದು. ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಂಡು ಜೈಲಿಗೆ ಕಳುಹಿಸಬೇಕು. ನಾಡಿನ ಎಲ್ಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ಸಿಗಲಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಶುಭ ಹಾರೈಸಿದರು.

ವಿಧಾನ ಪರಿಷತ್‌ಉಪಸಭಾಪತಿ ಎಂ.ಕೆ. ಪ್ರಾಣೇಶ್, ಮಾತನಾಡಿ “ಪರೀಕ್ಷೆ ಎಂದರೆ ಯುದ್ಧವಲ್ಲ, ವಿದ್ಯಾರ್ಥಿಗಳು ತಾವು ಓದಿದ್ದನ್ನು ಬರೆಯುವ ಒಂದು ವೇದಿಕೆ. ಯಾವುದೇ ಭಯವಿಲ್ಲದೆ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ” ಎಂದು ಇಡೀ ಸದನದ ಪರವಾಗಿ ಶುಭಕೋರಿದರು.

ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ:
ಮಾರ್ಚ್ 18 – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ.
ಮಾರ್ಚ್ 23 – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.

ಮಾರ್ಚ್ 25 – ದ್ವೀತಿಯ ಭಾಷೆ (ಇಂಗ್ಲಿಷ್, ಕನ್ನಡ).
ಮಾರ್ಚ್ 18 – ಗಣಿತ, ಸಮಾಜಶಾಸ್ತ್ರ.
ಮಾರ್ಚ್ 30 – ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ) ಹಾಗೂ ಎನ್ಎಸ್ ಕ್ಯೂ ಎಫ್ ವಿಷಯ.

ಎಪ್ರಿಲ್ 1 – ಜಿಟಿಎಸ್ ವಿಷಯಗಳು (ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಅರ್ಥಶಾಸ್ತ್ರ).
ಎಪ್ರಿಲ್ 2 – ಸಮಾಜ ವಿಜ್ಞಾನ.

Share This Article
error: Content is protected !!
";