ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪಘಾತ, ವಿಪತ್ತುಗಳು ಸಂಭವಿಸಿದಾಗ ತುರ್ತು ಸಂದರ್ಭದಲ್ಲಿ ಗಾಯಾಳುಗಳಿಗೆ ನೀಡುವ ಪ್ರಥಮ ಚಿಕಿತ್ಸೆಯು ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ತಿಳಿಸಿದರು.
ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ವತಿಯಿಂದ ಸೋಮವಾರ ರೆಡ್ ಕ್ರಾಸ್ ಸ್ವಯಂಸೇವಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣೆ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿ ವಿಕೋಪಗಳು ಅಥವಾ ಆಕಸ್ಮಿಕ ಅವಘಡಗಳು ಸಂಭವಿಸಿದಾಗ ಗಾಬರಿಯಾಗದೆ, ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಸ್ವಯಂಸೇವಕರು ವೈಜ್ಞಾನಿಕ ತರಬೇತಿ ಪಡೆದಿರಬೇಕು ಎಂದು ಅವರು ಕಿವಿಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಸಂತೋಷ್ ಉಜ್ಜನಪ್ಪ ಹಾಗೂ ವಿಪತ್ತು ನಿರ್ವಹಣೆ ತರಬೇತುದಾರ ಅಜ್ಮಲ್ ಶಕೀಬ್ ಅವರು ಪ್ರಥಮ ಚಿಕಿತ್ಸೆಯ ವಿವಿಧ ಹಂತಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಕರಿಯಪ್ಪ ಮಾಳಿಗೆ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಉಪ ಸಭಾಪತಿ ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ, ಮುಖಂಡರಾದ ಗುರುಮೂರ್ತಿ ಹಾಗೂ ಶ್ರೀನಿವಾಸ್ ಉಪಸ್ಥಿತರಿದ್ದರು.

