ಕಾಡಾನೆ ದಾಳಿ ಖಂಡಿಸಿ ಮೂರು ನಗರಗಳ ದಿಢೀರ್ ಬಂದ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಕಾಡಾನೆಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂತ್ರಸ್ತ ಸಾರ್ವಜನಿಕರು ರೊಚ್ಚಿಗೆದ್ದು ಜಿಲ್ಲೆಯ ಮೂರು ತಾಲೂಕಿನಲ್ಲಿ ದಿಢೀರ್ ಬಂದ್​ ಘೋಷಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಮೃತಪಟ್ಟ ಮಹಿಳೆಯ ಮೃತದೇಹವನ್ನು ಬಾಳೆಹೊನ್ನೂರು ಸಮೀಪದ ಕಡಬಗೆರೆಯ ರಾಜ್ಯ ಹೆದ್ದಾರಿಯಲ್ಲಿಟ್ಟು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿವಿಧ ರೈತ ಸಂಘಟನೆಗಳು ಹಾಗೂ ವಿವಿಧ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ, ಮೃತ ದೇಹವನ್ನು ಒತ್ತಾಯಪೂರ್ವಕವಾಗಿ ಪೊಲೀಸರು ಎತ್ತಲು ಹೋಗಿದ್ದ ವೇಳೆ, ಪ್ರತಿಭಟನಾಕಾರರು ಅಡ್ಡಿಪಡಿಸಿದ್ದರು.

- Advertisement - 

ಈ ಹಿನ್ನೆಲೆಯಲ್ಲಿ ನೂರಾರು ಜನರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ಕ್ರಮ ಖಂಡಿಸಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಗದ್ದಲ ಮಾಡಿದ್ದರು. ಈ ವೇಳೆ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ಮಾಡಲಾಗಿತ್ತು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮತ್ತು ಪ್ರಮುಖವಾಗಿ ಗುರುತಿಸಿಕೊಂಡಿದ್ದ 29 ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ಪೊಲೀಸರ ಕ್ರಮ ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ
, ಕೊಪ್ಪ, ಎನ್ಆರ್ ​ಪುರ ತಾಲೂಕುಗಳಲ್ಲಿ ದಿಢೀರ್ ಬಂದ್​​ ನಡೆಸಲಾಯಿತು. ಬಿಗಿ ಪೊಲೀಸ್​ ಬಂದೋಬಸ್ ವ್ಯವಸ್ಥೆ ಮಾಡಲಾಗಿದೆ.

- Advertisement - 

ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಸಂಪೂರ್ಣ ಬಂದ್​ಗೆ ಕರೆ ನೀಡಲಾಗಿತ್ತು. ರೈತಪರ ಸಂಘಟನೆಗಳು, ಮಲೆನಾಡು, ನಾಗರೀಕರ ಹಿತರಕ್ಷಣ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕರು ಬಿಜೆಪಿ ಪಕ್ಷ ಹಾಗೂ ಜೆಡಿಎಸ್ ಪಕ್ಷ ಈ ಬಂದ್​ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದವು.
ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದೆಲ್ಲ ಚಟುವಟಿಕೆಗಳು ಸ್ಥಗಿತಗೊಂಡಿದ್ದವು.
ಬಾಳೆಹೊನ್ನೂರು ಹಾಗೂ ಕಡಬಗೆರೆಯಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು
, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ.

ಜೆಡಿಎಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸುಧಾಕರ್ ಶೆಟ್ಟಿ ಘಟನೆ ಕುರಿತು ಪ್ರತಿಕ್ರಿಯೆ ನೀಡಿ ಮಾತನಾಡಿ, ಶೃಂಗೇರಿ ಕ್ಷೇತ್ರದಲ್ಲಿ ಆನೆ ದಾಳಿಗೆ ಇದುವರೆಗೆ 10 ನಿರಪರಾಧಿಗಳು ಬಲಿಯಾಗಿದ್ದು, ಮೂವರು ಕಾಡು ಕೋಣದ ದಾಳಿಯಿಂದ ಮೃತಪಟ್ಟಿದ್ದಾರೆ. ಮಲೆನಾಡಿನ ಜನರು ನಿತ್ಯ ಭಯದ ನೆರಳಿನಲ್ಲಿ ಬದುಕುತ್ತಿರುವುದು ದುಃಖಕರ ಮಾತ್ರವಲ್ಲ, ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಹುಣಸೆ ಹಳ್ಳಿಯಲ್ಲಿ ಮಹಿಳೆ ಆನೆ ದಾಳಿಗೆ ಬಲಿಯಾಗಿರುವುದು ಸರ್ಕಾರದ ನಿರ್ಲಕ್ಷ್ಯದ ಮತ್ತೊಂದು ಜೀವಂತ ಉದಾಹರಣೆಯಾಗಿದೆ. ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು ಹಾಗೂ ಶಾಶ್ವತ ಪರಿಹಾರ ಕ್ರಮ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು.

ರೈತರೊಂದಿಗೆ ನಡೆಸಿದ ಶಾಂತಿಯುತ ಪ್ರತಿಭಟನೆಯನ್ನು ಬಲಾತ್ಕಾರವಾಗಿ ನಿಗ್ರಹಿಸಿ, ಲಾಠಿಚಾರ್ಜ್ ನಡೆಸಿ ಬಂಧಿಸಿರುವ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ. ವಿಶೇಷವಾಗಿ ಬಿಜೆಪಿಯ ಹಾಗೂ ಜೆಡಿಎಸ್ ಪಕ್ಷದ ನಾಯಕರುಗಳನ್ನು ಗುರಿಯಾಗಿಸಿಕೊಂಡು ಬಂಧಿಸಿರುವುದು ರಾಜಕೀಯ ಪ್ರತೀಕಾರದ ಮನೋಭಾವವನ್ನೇ ತೋರಿಸುತ್ತದೆ ಎಂದು ಅವರು ಕಿಡಿಕಾರಿದ್ದಾರೆ.
ಜನರ ಜೀವ ಉಳಿಸಲು ಧ್ವನಿ ಎತ್ತಿದವರನ್ನು ಬಂಧಿಸುವುದು ಸರ್ಕಾರದ ದುರ್ಬಲತೆಯ ಸೂಚನೆಯಾಗಿದ್ದು
, ಶಾಂತಿಯುತ ಹೋರಾಟವನ್ನು ದಮನಿಸುವ ಮೂಲಕ ಜನರ ಆಕ್ರೋಶವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಮತ್ತು ಮಲೆನಾಡಿನ ಜನರ ಜೀವ ಭದ್ರತೆಯ ಪ್ರಶ್ನೆಯಲ್ಲಿ ನಾವು ಯಾವುದೇ ರಾಜಕೀಯ ಒತ್ತಡಕ್ಕೂ ತಲೆಬಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಮಲೆನಾಡು ಹಿತ ರಕ್ಷಣಾ ವೇದಿಕೆಯವರು ಕೊಪ್ಪ, ಶೃಂಗೇರಿ ಹಾಗೂ ನರಸಿಂಹರಾಜಪುರ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಿದ್ದಾರೆ. ಈ ಬಂದ್‌ಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ಘೋಷಿಸುತ್ತದೆ. ಪ್ರಜಾಪ್ರಭುತ್ವದ ಹಕ್ಕುಗಳ ರಕ್ಷಣೆಗೆ ಧ್ವನಿ ಎತ್ತಬೇಕು. ನಮ್ಮ ಹೋರಾಟ ನ್ಯಾಯಕ್ಕಾಗಿ, ಜನರ ಜೀವಕ್ಕಾಗಿ ಸರ್ಕಾರ ಎಚ್ಚರವಾಗಲಿ. ಮಲೆನಾಡಿನ ಜನರ ಸಹನೆಗೆ ಮಿತಿ ಇದೆ ಎಂದು ಪ್ರತಿಕ್ರಿಯೆ ನೀಡಿದರು.

ಉಡುಪಿ/ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರತಿಕ್ರಿಯಿಸಿದ್ದು, ಕಾಡಾನೆ ದಾಳಿಯಿಂದ ಉಂಟಾಗುತ್ತಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಲಾಗುವುದು.

ಈ ಸಂಬಂಧ 32 ಮಂದಿ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ಟಾಸ್ಕ್ ಫೋರ್ಸ್ ಅನ್ನು ಅರಣ್ಯ ಇಲಾಖೆ ಸಿದ್ಧಪಡಿಸಿದ್ದು, ಅದರ ಅನುಮೋದನೆ ಪ್ರಕ್ರಿಯೆ ನಡೆಯುತ್ತಿದೆ.

ಅರಣ್ಯ ಇಲಾಖೆಯ ಐಎಎಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿರುವ ಅವರು, ಟಾಸ್ಕ್ ಫೋರ್ಸ್ ಅನುಮೋದನೆಗೊಂಡರೆ ಆನೆಗಳ ಚಲನವಲನದ ಮೇಲೆ ಸಮಗ್ರ ಕಣ್ಗಾವಲು ಇಡುವುದು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದರಿಂದ ಮಾನವ ಸಾವುಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿದ್ದು, ಅಗತ್ಯ ಅನುಮೋದನೆ ಶೀಘ್ರದಲ್ಲೇ ದೊರಕುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಆನೆಗಳ ದಾಳಿ ಬಹಳ ನೋವುಂಟು ಮಾಡಿದೆ. ಈ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ದೂರುವುದು ಸರಿಯಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಈ ಸಮಸ್ಯೆಗೆ ಜವಾಬ್ದಾರರು ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ಸಮಗ್ರ ಪ್ರಸ್ತಾವನೆ ಕೇಂದ್ರಕ್ಕೆ ಕಳುಹಿಸಲಾಗುತ್ತಿದ್ದು, ಅದು ಕೇಂದ್ರಕ್ಕೆ ತಲುಪಿದ ತಕ್ಷಣ ಅಗತ್ಯ ಅನುಮೋದನೆ ನೀಡಲಾಗುತ್ತದೆ.

ಪ್ರಸ್ತುತ ಒಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಆದರೆ, ಮತ್ತೊಂದು ಆನೆ ದಾಳಿ ಮಾಡುವ ಸಾಧ್ಯತೆ ತಳ್ಳಿ ಹಾಕಲು ಸಾಧ್ಯವಿಲ್ಲ ಎಂದ ಅವರು, ಎಲ್ಲರೂ ಸಹಕಾರ ನೀಡಿದರೆ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುತ್ತದೆ ಎಂದು ಹೇಳಿದರು.

32 ಜನರ ಟಾಸ್ಕ್ ಫೋರ್ಸ್ ರಚನೆಯಾದರೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಮಾನವ ಹತ್ಯೆಗಳನ್ನು ತಡೆಯಬಹುದು ಎಂಬ ವಿಶ್ವಾಸವಿದೆ. ಕೇಂದ್ರ ಹಾಗೂ ರಾಜ್ಯ ಅರಣ್ಯ ಮಂತ್ರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಿರುವುದಾಗಿ ಸಂಸದರು ತಿಳಿಸಿದ್ದಾರೆ.

 

Share This Article
error: Content is protected !!
";