ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ವಿವಿ ಸಾಗರ ಹಿನ್ನೀರಿನಿಂದ 128 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಬಹುಗ್ರಾಮ ಯೋಜನೆಯಡಿ ನಡೆಯುತ್ತಿರುವ ಜಲ ಶುದ್ಧೀಕರಣ ಘಟಕ ಹಾಗೂ ಜಾಕ್ ವೆಲ್ ಪಾಯಿಂಟ್ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾಡಿದರು.
ಬಾಕಿ ಇರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದ ಅವರು ಅಗತ್ಯವಿರುವ ಅರಣ್ಯ ಇಲಾಖೆ ಅನುಮತಿ ಪಡೆಯುವ ಪ್ರಕ್ರಿಯೆಗೆ ವೇಗ ನೀಡಲಾಗುವುದು ಹಾಗೂ ಲಕ್ಕಿಹಳ್ಳಿ ಪವರ್ ಸ್ಟೇಷನ್ ಕಾಮಗಾರಿ ಕೂಡ ಶೀಘ್ರ ಆರಂಭಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ಐಮಂಗಲ ಹಂತ-1 ಮತ್ತು ಹಂತ-2 ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಹೊಸ ಜಾಕ್ ವೆಲ್ ನಿರ್ಮಾಣದ ಸ್ಥಳ ಪರಿಶೀಲಿಸಿದರು.
ಹರ್ತಿಕೋಟೆ ಯೋಜನೆಯ ಜಲ ಶುದ್ಧೀಕರಣ ಘಟಕದ ಪ್ರಗತಿ ಕೂಡ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹಸನ್ ಭಾಷಾ, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪೀರ್ ಸಾಬ್ ಹಾಗೂ ಇತರ ಹಲವಾರು ಅಧಿಕಾರಿಗಳು, ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.