ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಬರಿಮಲೆಗೆ ತೆರಳುತ್ತಿದ್ದ ಕನ್ನಡಿಗರ ವಾಹನದಲ್ಲಿದ್ದ ಕನ್ನಡ ಬಾವುಟವನ್ನು ತೆಗೆಯುವಂತೆ ತಮಿಳುನಾಡಿನಲ್ಲಿ ಪುಂಡರು ಆಗ್ರಹಿಸಿ, ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಖಂಡಿಸಿದ್ದಾರೆ.
ತಮಿಳಿಗರು ಮತ್ತು ಕನ್ನಡಿಗರು ಕರ್ನಾಟಕದಲ್ಲಿ ಸೋದರ ಭಾವದಿಂದ ಬಾಳುತ್ತಿರುವಾಗ, ತಮಿಳುನಾಡಿನಲ್ಲಿ ಪುಂಡರು ಕನ್ನಡಿಗ ಪ್ರಯಾಣಿಕರನ್ನು ಗುರಿಯಾಗಿಸಿ ಹಲ್ಲೆ ನಡೆಸುವುದು, ಕನ್ನಡಿಗರ ಅಸ್ಮಿತೆಯಾದ ಕೆಂಪು ಹಳದಿ ಬಾವುಟವನ್ನು ಅವಮಾನಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ತಮಿಳುನಾಡಿನ ಚುನಾವಣೆ ಸನಿಹದಲ್ಲಿರುವಾಗ ಇಂತಹ ಪ್ರಾದೇಶಿಕ ದ್ವೇಷವನ್ನೂ ಅಸ್ತ್ರವಾಗಿಸಿಕೊಳ್ಳುವ ಹುನ್ನಾರ ಇದರಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ತಮಿಳುನಾಡು ಮುಖ್ಯಮಂತ್ರಿಗಳಿಗೆ ಘಟನೆಯ ಕುರಿತು ಕ್ರಮ ಕೈಗೊಳ್ಳುವಂತೆ, ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವಂತೆ ಸಿಟಿ ರವಿ ಆಗ್ರಹಿಸಿದ್ದಾರೆ.

