ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಮುಖ್ಯಮಂತ್ರಿಯಾಗಿ ಕೊನೆಯ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ ಅವರು ಅವೈಜ್ಞಾನಿಕ ಗ್ಯಾರಂಟಿ ಯೋಜನೆಯನ್ನು ಸರಿದೂಗಿಸಲು ಈ ಬಾರಿ 1 ಲಕ್ಷ ಕೋಟಿ ರೂಪಾಯಿಗಳಷ್ಟಷ್ಟು ಸಾಲ ಮಾಡಲಿದ್ದಾರೆ! ಎಂದು ಬಿಜೆಪಿ ದೂರಿದೆ.
ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕರ್ನಾಟಕವು ಸಾಲ ರಾಜ್ಯವಾಗಿ ಪರಿವರ್ತನೆಯಾಗಿದೆ. ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್ ತಂದಿಟ್ಟಿದೆ ಎಂದು ಬಿಜೆಪಿ ಆರೋಪಿಸಿದೆ.
ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಸಾಲ ಪಡೆಯದೆ ಹೆಚ್ಚುವರಿ ಬಜೆಟ್ಮಂಡಿಸಿತ್ತು. ಪ್ರಸ್ತುತ ರಾಜ್ಯ ಸರ್ಕಾರದ ಆದಾಯದಲ್ಲಿ ಶೇ. 20 ರಷ್ಟು ಇಳಿಕೆ ಆಗಿದೆ ಎಂದು ಸ್ವತಃ ಆರ್ಥಿಕ ಇಲಾಖೆಯ ಕಾರ್ಯದರ್ಶಿಯೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಅಭಿವೃದ್ಧಿಯೇ ಮರೀಚಿಕೆಯಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರೇ ಅನುದಾನಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ತಿಳಿಸಿದೆ.
ಈಗಾಗಲೇ 2025-26 ನೇ ಸಾಲಿನ ಬಜೆಟ್ಗೆ ಪೂರ್ವಸಿದ್ಧತೆ ನಡೆದಿದ್ದು ನಿರೀಕ್ಷಿತ ತೆರಿಗೆ ಹರಿವು ಅಸಾಧ್ಯ ಎನ್ನಲಾಗಿದೆ. ಅಧಿಕಾರಕ್ಕಾಗಿ ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಘೋಷಿಸಿದ್ದ ಕಾಂಗ್ರೆಸ್ ಈಗ ಗ್ಯಾರಂಟಿಗಳನ್ನು ನಿಭಾಯಿಸಲು ಪರದಾಡುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ, ಜನರ ಮೇಲೆ ತೆರಿಗೆಯ ಬರೆ ಎಳೆಯುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.