ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ ಪಾಲಿಸಿದ್ದಾರೆ.
ಆದರೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಸದನದ ಹಿರಿಯ ಸದಸ್ಯರು ಹಾಗೂ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರೇ ಸ್ವತಃ ಈ ಕೆಟ್ಟ ಸಂಪ್ರದಾಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿರುವುದು ನಿಜಕ್ಕೂ ನಾಚಿಕೆಗೇಡು ಮತ್ತು ಖಂಡನೀಯ. ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಆ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯುವ ಅರ್ಹತೆ ಇಲ್ಲ.
ಇಷ್ಟಕ್ಕೂ ರಾಜ್ಯಪಾಲರು ಈ ರೀತಿ ತಮ್ಮ ಭಾಷಣವನ್ನ ಪೂರ್ತಿ ಓದದೆ ಕೇವಲ ಸಾಂಕೇತಿಕವಾಗಿ ಮಂಡಿಸಿ ಹೊರಟಿರುವುದು ಇದೇನು ಮೊದಲಲ್ಲ. ಈ ಹಿಂದೆ ಮಾಜಿ ರಾಜ್ಯಪಾಲರುಗಳಾದ ಖುರ್ಷಿದ್ ಆಲಂ ಖಾನ್ ಹಾಗೂ ಹಂಸರಾಜ್ ಭಾರಧ್ವಾಜ್ ಅವರು ಈ ರೀತಿ ಮಾಡಿರುವ ಉದಾಹರಣೆಗಳಿವೆ. ಆಗಲೂ ಸಹ ಅವರ ಭಾಷಣದ ನಂತರ ಸಂಪ್ರದಾಯಂದತೆ ರಾಷ್ಟ್ರಗೀತೆ ಹಾಡಿ ಗೌರವಯುತವಾಗಿ ಬೀಳ್ಕೊಡಲಾಗಿತ್ತು. ಆದರೆ ಇಂದು ರಾಜ್ಯಪಾಲರು ಭಾಷಣ ಮಂಡಿಸಿದ ನಂತರ ರಾಷ್ಟ್ರಗೀತೆಯನ್ನೂ ನುಡಿಸಲಿಲ್ಲ ಮತ್ತು ರಾಜ್ಯಪಾಲರನ್ನು ಗೌರವಯುತವಾಗಿ ಬೀಳ್ಕೊಡಲೂ ಇಲ್ಲ. ಇದು ಸಂವಿಧಾನ, ರಾಜ್ಯಪಾಲರ ಹುದ್ದೆ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ನಮ್ಮ ರಾಷ್ಟ್ರಗೀತೆಗೆ ಮಾಡಿರುವ ಘೋರ ಅಪಮಾನ.
ಇನ್ನು ವಿಧಾನ ಪರಿಷತ್ ನಲ್ಲಿ ಸದಸ್ಯರಾದ ಬಿ.ಕೆ ಹರಿಪ್ರದಾಸ್ ಅವರ ದುರ್ನಡತೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಗೆ ಕನ್ನಡಿ ಹಿಡಿದಂತಿತ್ತು.
ಇಂದಿನ ಘಟನಾವಳಿಗಳು ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನವಾಗಿದ್ದು, ಸದನದ ಗೌರವಕ್ಕೆ ಚ್ಯುತಿ ತರುವ ರೀತಿ ಗೂಂಡಾ ವರ್ತನೆ ತೋರಿದ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರಿಗೆ ಪತ್ರ ಮುಖೇನ ಅಶೋಕ್ ಅವರು ಒತ್ತಾಯಿಸಿದ್ದಾರೆ.

